ಬೆಂಗಳೂರು: ಮಾರ್ಚ್ ತಿಂಗಳ ಅಂತ್ಯದೊಳಗೆ ಪೂರ್ಣ ಅನುದಾನ ವೆಚ್ಚ ಮಾಡಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿನಲ್ಲಿ ಬುಧವಾರ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಸರ್ಕಾರದಿಂದ ಈಗಾಗಲೇ ಮೂರು ಕಂತುಗಳ ಅನುದಾನ ಬಿಡುಗಡೆಯಾಗಿದ್ದು ಮಾರ್ಚ್ ಮಾಸಾಂತ್ಯದೊಳಗೆ ಶೇ 100 ರಷ್ಟು ಪೂರ್ಣ ಪ್ರಮಾಣದಲ್ಲಿ ಅನುದಾನ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಈಗಾಗಲೇ ಟೆಂಡರ್ ಆಗಿರುವ ಉದ್ದೇಶಿತ ಕಾಮಗಾರಿಗಳನ್ನು ಕೂಡಲೆೇ ಆರಂಭಿಸಬೇಕು. ಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟನೆಗೆ ಸಜ್ಜಗೊಳಿಸಬೇಕು ಎಂದು ಅವರು ತಿಳಿಸಿದರು.
ಇಲಾಖೆ ವ್ಯಾಪ್ತಿಯ ನಿಗಮಗಳ ಕಾರ್ಯಕ್ರಮಗಳನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಬೇಕು ಎಂದ ಸಚಿವರು, ಗಂಗಾ ಕಲ್ಯಾಣ ಯೋಜನೆ ಅನುಷ್ಠಾನಗೊಳಿಸಲು ಶಾಸಕರ ಅಧ್ಯಕ್ಷತೆಯಲ್ಲಿರುವ ಸಮಿತಿಯಿಂದ ಮಕರ ಸಂಕ್ರಾಂತಿ ಹಬ್ಬದೊಳಗೆ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಿ ಡಿಬಿಟಿ ಮೂಲಕ ಅನುಷ್ಠಾನಗೊಳಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ನಿಗಮಗಳ ವ್ಯವಸ್ಥಾಪಕರಿಗೆ ಸೂಚಿಸಿದರು.
ಎರಡೂ ಇಲಾಖೆಗಳಿಗೆ ಸಂಬಂಧಿಸಿದಂತೆ ಮುಂಬರುವ ಆಯವ್ಯಯದಲ್ಲಿ ಹೆಚ್ಚು ಫಲಾನುಭವಿಗಳಿಗೆ ಉಪಯುಕ್ತ ನೂತನ ಯೋಜನೆಗಳನ್ನು ರೂಪಿಸಬೇಕಿದೆ. ಇದಕ್ಕಾಗಿ ಅಧಿಕಾರಿಗಳು ತಯಾರಿ ಮಾಡಿಕೊಳ್ಳಬೇಕೆಂದು ಸಚಿವರು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಸಲಹೆಗಾರ ಡಾ.ಇ.ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ.ಕೆ.ರಾಕೇಶಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಬಿ.ಉದಯಕುಮಾರ್ ಶೆಟ್ಟಿ ಇದ್ದರು.