ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದಿಂದ ಜಿಲ್ಲಾ ಸಮಾವೇಶಗಳು, ನಾಲ್ಕು ತಂಡಗಳಲ್ಲಿ ವಿಜಯ ಸಂಕಲ್ಪ ಯಾತ್ರೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ತಿಳಿಸಿದರು.
ಶನಿವಾರ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ಪಕ್ಷ ಮುಂದಿನ ಚುನಾವಣೆಯಲ್ಲಿ 150ಕ್ಕಿಂತ ಹೆಚ್ಚು ಶಾಸಕರ ಸ್ಥಾನ ಗೆದ್ದು ಮತ್ತೊಮ್ಮೆ ಸರಕಾರ ರಚಿಸಲಿದೆ. ಬೂತ್ ಗ್ರಾಮಗಳಲ್ಲಿರುವ ಫಲಾನುಭವಿಯ ಮನಸ್ಸಿನಲ್ಲಿ ಬಿಜೆಪಿ ಪರ ಅಲೆ ಇದೆ. ವಾತಾವರಣವೂ ನಮ್ಮ ಪರ ಇದೆ. ಬೂತ್ ವಿಜಯ, ಬೂತ್ ಸಂಕಲ್ಪ ಅಭಿಯಾನ ಯಶಸ್ವಿಯಾಗಿದೆ ಎಂದು ಮೆಚ್ಚುಗೆ ಸೂಚಿಸಿದರು.
ಡಾ.ಪರಮೇಶ್ವರ್, ಮುನಿಯಪ್ಪರ ಹೋರಾಟದಿಂದ ಕಾಂಗ್ರೆಸ್ ಬಸ್ ಪಂಕ್ಚರ್ ಆಗುತ್ತಿದೆ. ಕಾಂಗ್ರೆಸ್ ಬೀದಿ ಕಾಳಗ ಶುರುವಾಗಿದೆ. ಜೆಡಿಎಸ್ ಪಂಚರತ್ನ ಯಾತ್ರೆ ವಿಜಯಪುರ ತಲುಪುವಾಗ ಹಾಸನದಲ್ಲಿ ಮನೆಯೊಳಗೆ ಜಗಳ ಆರಂಭವಾಗಿದೆ. ಆದುದರಿಂದ ಬಿಜೆಪಿ ಜನರ ವಿಶ್ವಾಸದ ಪಕ್ಷವಾಗಿ ಕಾಣುತ್ತಿದೆ ಎಂದು ಹೇಳಿದರು.
ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಕಾಂಗ್ರೆಸ್ ಮುಖಂಡ ಯಾರು ರಾಹುಲ್ ಗಾಂಧಿಯೇ? ವಿಶ್ವವೇ ಮೆಚ್ಚಿದ ಮಹಾನ್ ನಾಯಕ ಪ್ರಧಾನಿ ಮೋದಿಜಿ, ಅಮಿತ್ ಶಾ ನಮ್ಮ ಜೊತೆ ಇರಬೇಕಾದರೆ ಬರುವಂಥ ಕರ್ನಾಟಕ ಸೇರಿ ಎಲ್ಲ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು ನಿಶ್ಚಿತ ಎಂದರು.
ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಾತನಾಡಿ, ಮೂರ್ನಾಲ್ಕು ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಇದು ಅತ್ಯಂತ ಮಹತ್ವದ ಸಭೆ. ಪಕ್ಷದ ಸಿದ್ಧತೆ, ಜನರ ಒಲವು, ಹಿರಿಯರ ವಿಶ್ಲೇಷಣೆ ಗಮನಿಸಿದರೆ ಬಿಜೆಪಿ ಮತ್ತೆ ಅಧಿಕಾರ ಪಡೆಯುವುದು ನಿಶ್ಚಿತ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ, ಸಹ ಉಸ್ತುವಾರಿ ಡಿ.ಕೆ. ಅರುಣಾ, ಮಾಜಿ ಸಿಎಂ ಜಗದೀಶ ಶೆಟ್ಟರ್, ಡಿ.ವಿ.ಸದಾನಂದ ಗೌಡ ಸೇರಿದಂತೆ ಭಾಗವಹಿಸಿದ್ದರು.