ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಿಂದ ಬಿಜೆಪಿಯಿಂದ ಟಿಕೆಟ್ ಬಯಸಿದ್ದು, ಸ್ಪರ್ಧಿಸುವ ಇಚ್ಚೆ ಹೊಂದಿರುವೆ. ಪಕ್ಷದ ನಾಯಕರನ್ನು ಸಹ ಭೇಟಿ ಆಗಿದ್ದೇನೆ. ಕಾರ್ಕಳ ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡುವ ದೃಢ ಸಂಕಲ್ಪ ಮಾಡಿರುವೆ. ಬಿಜೆಪಿ ಟಿಕೆಟ್ ಸಿಗದೇ ಇದ್ದಲ್ಲಿ ಪಕ್ಷೇತರಳಾಗಿ ಸ್ಪರ್ಧಿಸಲು ನಿರ್ಧಾರ ಮಾಡಿದ್ದೇನೆ ಎಂದು ಬಿಜೆಪಿ ಪಕ್ಷದ ಕಾರ್ಯಕರ್ತೆ ಡಾ.ಮಮತಾ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಚುನಾವಣೆಯಲ್ಲಿ ಬಿಜೆಪಿ ಯಿಂದ ಸ್ಪರ್ಧಿಸುವ ಆಕಾಂಕ್ಷಿ ನಾನು. ಇದಕ್ಕಾಗಿ ಈಗಾಗಲೇ ತಯಾರಿ ಮಾಡಿಕೊಂಡಿದ್ದೇನೆ. ಕ್ಷೇತ್ರದ ಈಗಿನ ಬಿಜೆಪಿ ಶಾಸಕ ಹಾಗೂ ಸಚಿವ ಸುನಿಲ್ ಕುಮಾರ್ ಅಧಿಕಾರಾವಧಿಯಲ್ಲಿ ಕಾರ್ಕಳ ಅಭಿವೃದ್ಧಿಯಲ್ಲಿ ಹಿನ್ನಡೆ ಕಂಡಿದೆ ಎಂದು ತಿಳಿಸಿದರು.
ಕಾರ್ಕಳದಲ್ಲಿ ಇದೂವರೆಗೆ ಯಾವುದೇ ಬೃಹತ್ ಕೈಗಾರಿಕೆಗಳನ್ನು ಸ್ಥಾಪನೆ ಗೊಂಡಿಲ್ಲ. ಹೀಗಾಗಿ ಯುವಕರಿಗೆ ಉದ್ಯೋಗಾವಕಾಶಗಳಿಲ್ಲ. ಕೃಷಿ, ಕೃಷಿಯಾಧಾರಿತ ಬೆಳೆಗಳ ಸಂಸ್ಕರಣೆ, ಮಾರುಕಟ್ಟೆಗೆ ಬೇಕಾದ ವ್ಯವಸ್ಥೆ ಇಲ್ಲ. ಕೃಷಿ ಕಾಲೇಜು ಸ್ಥಾಪನೆಗೂ ಯಾರೂ ಮುಂದಾಗಿಲ್ಲ. ಕಾರ್ಕಳಕ್ಕೆ ಕೊಂಕಣ ರೈಲ್ವೆ ವಿಸ್ತರಿಸಿ ಧರ್ಮಸ್ಥಳಕ್ಕೆ ಜೋಡಿಸಲು ಯಾರೂ ಮನಸ್ಸು ಮಾಡಿಲ್ಲ ಎಂದರು.
ವಿಶಾಲಾಕ್ಷಿ ಶೆಟ್ಟಿ, ವೇದಾವತಿ ಹೆಗ್ಡೆ, ಮಾಯಾ ಶೆಟ್ಟಿ, ವಿನೂತನ ಶೆಟ್ಟಿ, ಪ್ರಕಾಶ್ ಶೆಟ್ಟಿ ಇದ್ದರು.