ಬೆಂಗಳೂರು: ಪಕ್ಷದ ಮೊದಲ ಪಟ್ಟಿಯ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ಮಂಗಳವಾರ, ಬುಧವಾರ ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದೆ. ಬಳಿಕ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಬಹುತೇಕ ಏ. 8 ರಂದು ಸಂಸದೀಯ ಮಂಡಳಿಯಲ್ಲಿ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸೋಮವಾರ ಮಾಧ್ಯಮದವರ ಜತೆಗೆ ಮಾತನಾಡಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮೀಸಲಾತಿ ಬಗ್ಗೆ ಟ್ವಿಟ್ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಗೆ ಅಂಬೇಡ್ಕರ್ ಅವರ ಮೇಲೆ, ಅವರು ಬರೆದಿರುವ ಸಂವಿಧಾನದ ಮೇಲೆ ನಂಬಿಕೆಯೇ ಇಲ್ಲ ಎಂದರು.
ಮೀಸಲಾತಿ ನೀಡಿರುವುದು ಕಾನೂನು ಬಾಹಿರ, ಸಂವಿಧಾನ ವಿರೋಧಿ ಎಂದು ಕೆಳಮಟ್ಟದ ಶಬ್ದಗಳನ್ನು ಬಳಸಿದ್ದಾರೆ. ಜನಸಂಖ್ಯೆ ಆಧಾರಿತ ಮೀಸಲಾತಿ ನೀಡಬೇಕು ಎಂದು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಎಸ್.ಸಿ/ ಎಸ್.ಟಿ ಸಮುದಾಯಗಳ ಬಹು ವರ್ಷಗಳ ಬೇಡಿಕೆ ಈಡೇರಿಸಿ, ಸಂವಿಧಾನದ ಪರಿಚ್ಛೇದ 9 ಕ್ಕೆ ಸೇರಿಸಲು ಶಿಫಾರಸು ಮಾಡಲಾಗಿದೆ ಎಂದರು.
ಅವರ ಕಾಲದಲ್ಲಿ ಏನೂ ಮಾಡದೇ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದದವರನ್ನು ಬರೀ ಮತ ಬ್ಯಾಂಕ್ ಗಾಗಿ ಬಳಕೆ ಮಾಡಲಾಗಿದೆ ಎಂದ ಅವರು, ನಾಗಮೋಹನ್ ದಾಸ್ ವರದಿ ಬಂದು 4 ವರ್ಷ ಆಗಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಯಡಿಯೂರಪ್ಪ ನವರ ಅವಧಿಯಲ್ಲಿ ವರದಿ ಬಂದ ಆರು ತಿಂಗಳಿಗೆ ವಿಸ್ತರಣೆ ಮಾಡಿದರು ಎಂದರು.
ನನ್ನ ಅವಧಿಯಲ್ಲಿ ಸರ್ವ ಪಕ್ಷಗಳ ಸಭೆ ಕರೆದು ಒಪ್ಪಿಗೆ ಪಡೆಯಲಾಯಿತು. ನಂತರ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಪರ ನಿರ್ಣಯ ಕೈಗೊಳ್ಳಲಾಯಿತು. ಸರ್ಕಾರ ಆದೇಶ ಹೊರಡಿಸಿ ಶೆಡ್ಯೂಲ್ 9 ಕ್ಕೆ ಸೇರಿಸಲಾಗಿದೆ ಎಂದರು.