ಮಂಗಳೂರು: ಈ ಬಾರಿ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಮಂಗಳೂರು ಕ್ಷೇತ್ರವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲುವುದು ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಂಗಳೂರು ಕ್ಷೇತ್ರದ ಪ್ರಭಾರ ಪ್ರತಾಪ್ ಸಿಂಹ ನಾಯಕ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಿಜೆಪಿ ಈ ಬಾರಿ ಬಹಳಷ್ಟು ಹೊಸ ಮುಖಗಳಿಗೆ ಅವಕಾಶ ಕೊಟ್ಟಿದೆ. ಅಧಿಕಾರದಲ್ಲಿ ಇರುವ ಪಕ್ಷವೊಂದು ಹಾಲಿ ಶಾಸಕರ ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಧೈರ್ಯ ತೋರಿರುವುದು ಶ್ಲಾಘನೀಯ ಎಂದರು.
ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಮಾತನಾಡಿ, ಮಂಗಳೂರು ಕ್ಷೇತ್ರದ ಹಾಲಿ ಶಾಸಕ ಕಾಂಗ್ರೆಸ್ ಯು.ಟಿ ಖಾದರ್ ನಾಲ್ಕು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರೂ, ಜನರ ಅಪೇಕ್ಷೆಯಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಈ ಬಾರಿ ಚುನಾವಣೆಗಾಗಿ ಬಿಜೆಪಿ ಕಳೆದ ಐದು ವರ್ಷಗಳಿಂದಲೂ ಕ್ಷೇತ್ರದಲ್ಲಿ ಕೆಲಸ ಮಾಡುತ್ತಲೇ ಬಂದಿದೆ. ಹೀಗಾಗಿ ಜನರ ಮನಸ್ಸನ್ನು ಗೆದ್ದು, ಚುನಾವಣೆಯಲ್ಲಿ ಗೆಲ್ಲುವುದು ನಿಶ್ಚಿತ ಎಂದರು.
ಟಿಕೆಟ್ ಆಕಾಂಕ್ಷಿ ಆಗಿದ್ದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಅವರು ಮಾತನಾಡಿ, ಟಿಕೆಟ್ ಘೋಷಣೆಯಾಗುವವರೆಗೂ ತಾನು ಆಕಾಂಕ್ಷಿಯಾಗಿದ್ದುದು ನಿಜ. ಆದರೆ ಒಮ್ಮೆ ಪಕ್ಷದ ಹಿರಿಯರು ಅಭ್ಯರ್ಥಿಯನ್ನು ಘೋಷಣೆ ಮಾಡಿದ ಬಳಿಕ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುವುದು ನಮ್ಮ ಪರಂಪರೆ ಮತ್ತು ಬದ್ಧತೆ. ಹಾಗಾಗಿ ಸತೀಶ್ ಕುಂಪಲ ಅವರಿಗೆ ಪೂರ್ಣ ಸಹಕಾರ ಮತ್ತು ಬೆಂಬಲ ನೀಡಿ ಅವರ ಗೆಲುವಿಗಾಗಿ ಶ್ರಮಿಸುವುದಾಗಿ ತಿಳಿಸಿದರು.
ಮಂಗಳೂರು ಮಂಡಲ ಅಧ್ಯಕ್ಷ ಚಂದ್ರಹಾಸ ಪಂಡಿತ್ ಹೌಸ್, ಜಿಲ್ಲಾ ವಕ್ತಾರರು ಹಾಗೂ ಮಂಗಳೂರು ವಿಭಾಗ ಮಾಧ್ಯಮ ಪ್ರಮುಖರಾದ ಜಗದೀಶ್ ಶೇಣವ, ಮಂಡಲ ಉಪಾಧ್ಯಕ್ಷ ಯಶವಂತ ಅಮೀನ್, ನಾಯಕರಾದ ಚಂದ್ರಹಾಸ ಉಳ್ಳಾಲ, ಚಂದ್ರಹಾಸ ಉಚ್ಚಿಲ್, ರವೀಂದ್ರ ಶೆಟ್ಟಿ ಉಳಿದೊಟ್ಟು ಇದ್ದರು.