ಮಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣೆಗೆ ಮತದಾನದ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮತ್ತು ಮತದಾನದ ಪವಿತ್ರತೆ ಕಾಪಾಡುವ ಹಿತದೃಷ್ಟಿಯಿಂದ ಮೇ 10 ರಂದು ಜಿಲ್ಲೆಯಾದ್ಯಂತ ನಡೆಯುವ ವಾರದ ಸಂತೆ, ಜಾತ್ರೆ, ಉತ್ಸವ, ಮೇಳ, ಇತ್ಯಾದಿಗಳನ್ನು ನಿಷೇಧಿಸಿ ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಅವರು ಆದೇಶ ಹೊರಡಿಸಿದ್ದಾರೆ.
ಚುನಾವಣೆ ನೀತಿ ಸಂಹಿತೆ ಘೊಷಣೆ ಬಳಿಕ ಈವರೆಗೆ ಜಿಲ್ಲೆಯಲ್ಲಿ 18.40 ಲಕ್ಷ ರೂ.ಗಳ ಡ್ರಗ್ಸ್, 22 ಲಕ್ಷ ರೂ.ಗಳ ಮೌಲ್ಯದ ಮದ್ಯ, 4.50 ಲಕ್ಷ ರೂ. ಬೆಲೆಯ ಚುನಾವಣಾ ಸಾಮಗ್ರಿಗಳು, 1.92 ಕೋಟಿ ರೂ. ಹಣದ ಪೈಕಿ ದಾಖಲೆಗಳನ್ನು ಪರಿಶೀಲಿಸಿದ ನಂತರ 13.55 ಲಕ್ಷ ರೂ.ಗಳ ಹಣವನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮತದಾರರ ಭಾವಚಿತ್ರ ಇರುವ ಗುರುತಿನ ಚೀಟಿ ಇಲ್ಲದಿದ್ದಲ್ಲಿ, ಮತ ಚಲಾಯಿಸಲು ಈ ಕೆಳಕಂಡ ಪರ್ಯಾಯ ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆ ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ. ಮತದಾರ ಆಧಾರ ಕಾರ್ಡ್, ಎಂ.ಎನ್.ಆರ್.ಇ.ಜಿ.ಎ. ಜಾಬ್ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿ ನೀಡಿರುವ ಭಾವಚಿತ್ರ ಇರುವ ಪಾಸ್ ಬುಕ್, ಕಾರ್ಮಿಕ ಸಚಿವಾಲಯದಿಂದ ನೀಡಿರುವ ಆರೋಗ್ಯ ವಿಮೆ ಕಾರ್ಡ್, ಚಾಲನಾ ಪರವಾನಗಿ (ಡ್ರೈವಿಂಗ್ ಲೈಸೆನ್ಸ್), ಪ್ಯಾನ್ ಕಾರ್ಡ್, ಎನ್.ಪಿ.ಆರ್ ನ ಅಡಿಯಲ್ಲಿ ಆರ್.ಜಿ.ಐ. ನೀಡಿರುವ ಸ್ಮಾರ್ಟ್ ಕಾರ್ಡ್, ಭಾರತೀಯ ಪಸ್ಪೋರ್ಟ್, ಭಾವಚಿತ್ರ ಇರುವ ಪಿಂಚಣಿ ದಾಖಲೆ, ಸೇವಾ ಗುರುತಿನ ಚೀಟಿ (ಕೇಂದ್ರ, ರಾಜ್ಯ ಸರ್ಕಾರ, ಪಿಎಸ್ಯು ಗಳ ಗುರುತಿನ ಚೀಟಿ) ಎಂ.ಪಿ, ಎಂ.ಎಲ್.ಎ, ಎಂ.ಎಲ್.ಸಿ. ಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ ದಾಖಲೆ.
ಮತದಾರರು ವೋಟರ್ ಸ್ಲಿಪ್ ಜೊತೆಗೆ ಎಪಿಕ್ ಕಾರ್ಡ್ ಅಥವಾ ಮೇಲೆ ತಿಳಿಸಿದ ಪರ್ಯಾಯ ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಕಡ್ಡಾಯವಾಗಿ ಮತಗಟ್ಟೆಯಲ್ಲಿ ಹಾಜರುಪಡಿಸಿ ಮತ ಚಲಾಯಿಸಬಹುದು ಎಂದು ತಿಳಿಸಿದ್ದಾರೆ.