ಪುತ್ತೂರು: ಅಭಿವೃದ್ಧಿಯಲ್ಲಿ ನಾವು ರಾಜಕೀಯ ಮಾಡುವುದಿಲ್ಲ, ದ್ವೇಷದ ರಾಜಕಾರಣ ನನ್ನಲ್ಲಿಲ್ಲ. ಗ್ರಾಮ ಮಟ್ಟದಿಂದ ಅಭಿವೃದ್ಧಿ ಕೆಲಸಗಳು ಆರಂಭವಾಗಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಮಂಗಳವಾರ ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಪ್ರತಿಜ್ಞಾ ವಿಧಿ ಸ್ವೀಕಾರದ ಬಳಿಕ ಪುತ್ತೂರಿನಲ್ಲಿ ಅಧಿಕಾರಿಗಳ ಸಭೆ ಕರೆಯುತ್ತೇನೆ. ಮಳೆಗಾಲ ಪ್ರಾರಂಭಗೊಂಡಿದ್ದು, ಮಳೆಗಾಲದಲ್ಲಿ ಕೈಗೊಳ್ಳಬೇಕಾದ ಕಾರ್ಯಸೂಚಿಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಿದ್ದೇನೆ. ಪುತ್ತೂರಿನಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ನೀಡಲಿದ್ದು ಬಾಕಿ ಇರುವ ಕಡತಗಳನ್ನು ಗ್ರಾಮ ಮಟ್ಟದಲ್ಲೇ ಪರಿಹರಿಸಿ ಸ್ಥಳದಲ್ಲೇ ಸಾರ್ವಜನಿಕರಿಗೆ ನೀಡುವ ಕೆಲಸವನ್ನು ಮಾಡಲಿದ್ದೇನೆ. ಅಕ್ರಮ ಸಕ್ರಮ ಮತ್ತು 94ಸಿ ಹಕ್ಕುಪತ್ರವನ್ನು ಗ್ರಾಮ ಮಟ್ಟದಲ್ಲೇ ವಿತರಣೆ ಮಾಡುವ ಕೆಲಸವನ್ನು ಮಾಡುತ್ತೇನೆ. ನಾನು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿದ್ದೇನೆ ಎಂದು ಹೇಳಿದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮಾತನಾಡಿ ಪುತ್ತೂರಿನಲ್ಲಿ ಕಾಂಗ್ರೆಸ್ ದಿಗ್ವಿಜಯ ಆರಂಭವಾಗುತ್ತಿದ್ದಂತೆಯೇ ಪುತ್ತೂರಿನಲ್ಲಿ ಬಿಜೆಪಿಯವರ ಪ್ರತಿಭಟನೆ ನಾಟಕ ಆರಂಭವಾಗಿದೆ, ಬಿಜೆಪಿಯವರನ್ನು ಎದುರಿಸುವ ಶಕ್ತಿ ನಮಗಿದೆ ಎಂದರು.
ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಸದಸ್ಯ ಎಂ ಎಸ್ ಮಹಮ್ಮದ್. ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ , ಮಾಜಿ ಪುಡಾ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ನ್ಯಾಯವಾದಿ ಭಾಸ್ಕರ ಕೋಡಿಂಬಾಳ, ನಝೀರ್ ಮಠ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶುಕೂರ್ ಹಾಜಿ , ಮಾಜಿ ಜಿಪಂ ಸದಸ್ಯ ಸೋಮನಾಥ , ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಇದ್ದರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮುರಳೀದರ್ ರೈ ಮಠಂತಬೆಟ್ಟು ವಂದಿಸಿದರು.