ಮಂಗಳೂರು: ಜಿಲ್ಲೆಯ ಹಲವು ಕಡೆಗಳಲ್ಲಿ ಸಾಧಾರಣ ಮಳೆ ಆಗುತ್ತಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮುಂಗಾರು ತಂಪೆರೆದಿದೆ.
ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ ಜಿಲ್ಲೆಯಲ್ಲಿ ಜೂನ್ 14 ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣದೊಂದಿಗೆ ಆಗಾಗ್ಗೆ ಸಾಧಾರಣ ಮಳೆ ಸುರಿಯುತ್ತಿದೆ. ಮಂಗಳೂರು, ಉಳ್ಳಾಲ, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಬಹುತೇಕ ಕಡೆಯೂ ಉತ್ತಮ ಮಳೆಯಾಗಿದೆ. ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು, ವಿದ್ಯುತ್ ಅವ್ಯವಸ್ಥೆ ಉಂಟಾಗಿದೆ.
ಬಿಜೈಯಲ್ಲಿ ರಸ್ತೆಗೆ ಮರ ಬಿದ್ದು ಅರ್ಧ ಗಂಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸಾಮಾನ್ಯವಾಗಿ ಮಳೆಗಾಲ ಆರಂಭವಾಗುತ್ತಲೇ ನಗರದಲ್ಲಿ ಸಂಚಾರ ಸಮಸ್ಯೆ ತಲೆದೋರುತ್ತಿವೆ. ಅದರಂತೆ ಶನಿವಾರ ಕೂಡ ವಾಹನ ಸವಾರರು ಪರದಾಡಿದರು.
ಸ್ಮಾರ್ಟ್ ಸಿಟಿ ಕಾಮಗಾರಿಗಳ ಅಪೂರ್ಣ ಆಗಿರುವ ಕಡೆಗಳಲ್ಲಿ ಚರಂಡಿ ಅವ್ಯವಸ್ಥೆಯಿಂದಾಗಿ ರಸ್ತೆಯಲ್ಲೇ ಮಳೆ ನೀರು ಹರಿಯುತ್ತಿದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 45 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.