ಮಂಗಳೂರು: ಕುಷ್ಠರೋಗ ಶಾಪವಲ್ಲ ಹಾಗೂ ಅನುವಂಶಿಕವಾಗಿ ಬರುವ ರೋಗವಲ್ಲ, ಅದರ ವಿರುದ್ಧದ ಹೋರಾಟದಲ್ಲಿ ವೈದ್ಯಕೀಯವಾಗಿ ಗಮನಾರ್ಹ ಯಶಸ್ಸು ಸಾಧಿಸಿದ್ದರೂ, ಸಾಮಾಜಿಕವಾಗಿ ಸಾಧಿಸಬೇಕಾದದ್ದು ಬಹಳಷ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಹೇಳಿದರು.
ಶುಕ್ರವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಎಲ್ ಸಿ ಡಿ ಸಿ ಕುಷ್ಠರೋಗ ವಿಶೇಷ ಸಮೀಕ್ಷೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಷ್ಠರೋಗದ ಬಗ್ಗೆ ಇರುವ ಸಾಮಾಜಿಕ ಸಮಸ್ಯೆಯನ್ನು ಬಗೆಹರಿಸದ ಹೊರತು ಕುಷ್ಠರೋಗ ಮುಕ್ತ ಭಾರತದ ದೃಷ್ಟಿಕೋನವನ್ನು ಸಾಧಿಸುವುದು ಕಷ್ಟಸಾಧ್ಯ, ಮೂರು ದಶಕಗಳಲ್ಲಿ ಗಣನೀಯ ಪ್ರಗತಿ ಸಾಧಿಸಿದ್ದರೂ, ಭಾರತ ವಿಶ್ವದ ಶೇ 59 ರಷ್ಟು ಕುಷ್ಟರೋಗಿಗಳ ನೆಲೆಯಾಗಿದೆ ಎಂದರು.
ಜಿಲ್ಲೆಯಾದ್ಯಂತ ಜೂನ್ 19 ರಿಂದ ಜುಲೈ 6 ರವರಿಗೆ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಪ್ರಕರಣ ಪತ್ತೆ ಹಚ್ಚುವ ಸಲುವಾಗಿ ಆರೋಗ್ಯ ಇಲಾಖೆ ತಂಡಗಳು ಮನೆ-ಮನೆಗೆ ಭೇಟಿ ನೀಡಿ ರೋಗದ ಲಕ್ಷಣಗಳನ್ನು ಗುರುತಿಸಿ ಸ್ಪರ್ಶಜ್ಞಾನ, ನೋವು, ನವೆ ಇಲ್ಲದ ತಾಮ್ರ ಅಥವಾ ತಿಳಿ ಬಿಳುಪಾದ ಮಚ್ಚೆಗಳು ಕಂಡುಬಂದ ಪ್ರಕರಣಗಳನ್ನು ಗುರುತಿಸಿ, ಅವರಿಗೆ ಹೆಚ್ಚಿನ ಚಿಕಿತ್ಸೆಯ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರು.
ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ಸುದರ್ಶನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಎಲ್ಲಾ ತಾಲೂಕು ಆರೋಗ್ಯಾಧಿಕಾರಿಗಳು ಭಾಗವಹಿಸಿದ್ದರು.