
ಕಾರವಾರ: ಜಿಲ್ಲೆಯ ಜನರು ಸರಕಾರದ ವಿವಿಧ ಸೌಲಭ್ಯಕ್ಕೆ ಇಲಾಖೆಗಳಿಗೆ ಸಲ್ಲಿಸುವ ಅರ್ಜಿಗಳಿಗೆ ಸಂಬಂಧಿಸಿದ ಕಡತಗಳನ್ನು ಅಧಿಕಾರಿಗಳು ನಿಗದಿತ ಕಾಲಮೀತಿಯೊಳಗೆ ವಿಲೇವಾರಿ ಮಾಡಬೇಕು. ಇಲ್ಲದೇ ಅನಗತ್ಯವಾಗಿ ಕಡತಗಳನ್ನು ವಿಳಂಬವಾಗಿ ವಿಲೇವಾರಿ ಮಾಡುವ ಅಧಿಕಾರಿಗಳ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಖಡಕ್ ಸೂಚನೆ ನೀಡಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ ಮಂಡಿಸಲಾದ ಹಿಂದುಳಿದ ವರ್ಗಗಳ ಇಲಾಖೆಯ ಕಡತಗಳ ಪರಿಶೀಲನೆ ನಡೆಸಿ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.
ಈಚೆಗೆ ಜಿಲ್ಲೆಯ ವಿವಿಧ ಇಲಾಖೆಗಳಿಗೆ ಖುದ್ದು ಭೇಟಿ ನೀಡಿ ಕಡತಗಳ ವಿಲೇವಾರಿ ಕುರಿತಂತೆ ಪರಿಶೀಲನೆ ನಡೆಸಿದ್ದು, ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಬಾಕಿ ಇದ್ದ ಕಡತಗಳನ್ನು ಪರಿಶೀಲಿಸಿ ಅವುಗಳನ್ನು ಕೂಡಲೇ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ಜಿಲ್ಲಾ ಸಮಿತಿ ಸಭೆಯಲ್ಲಿ ಮಂಡಿಸಲಾದ ಹಿಂದುಳಿದ ವರ್ಗಗಳ ಇಲಾಖೆ ಸಿಂಧುತ್ವ ಪ್ರಮಾಣ ಪತ್ರದ ಕಡತಗಳು ಸೇರಿದಂತೆ ಒಟ್ಟು 126 ಕಡತಗಳನ್ನು ವಿಲೇವಾರಿ ಮಾಡಲಾಗಿದೆ. ಎಲ್ಲಾ ಇಲಾಖೆಗಳಿಗೆ ಸಾರ್ವಜನಿಕರಿಂದ ಸಲ್ಲಿಕೆಯಾಗುವ ಅರ್ಜಿಗಳಲ್ಲಿ ಪೂರಕ ದಾಖಲೆಗಳು ಇಲ್ಲದಿದ್ದಲ್ಲಿ ಈ ಬಗ್ಗೆ ಅರ್ಜಿದಾರರಿಗೆ ಮಾಹಿತಿ ನೀಡಿ, ಅಗತ್ಯ ಪೂರಕ ದಾಖಲೆಗಳನ್ನು ಪಡೆದುಕೊಂಡು ಕಡತಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಎಲ್ಲಾ ಇಲಾಖೆಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು, ದುರುದ್ದೇಶ ಪೂರಕವಾಗಿ ಕಡತಗಳ ವಿಲೇವಾರಿಗೆ ವಿಳಂಬ ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ದ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿವಿಧ ಇಲಾಖೆಗಳಿಂದ ತಮಗೆ ಸಲ್ಲಿಕೆ ಆಗುವ ಕಡತಗಳನ್ನು ತಮ್ಮ ಹಂತದಲ್ಲಿ ಕೂಡಲೇ ವಿಲೇವಾರಿ ಮಾಡಲಾಗುವುದು. ಸಾರ್ವಜನಿಕ ಉದ್ದೇಶದಿಂದ ಕೂಡಿರುವ , ಅತ್ಯಂತ ತುರ್ತಾಗಿ ವಿಲೇವಾರಿ ಆಗಬೇಕಾದ ಕಡತಗಳಿದ್ದಲ್ಲಿ, ಅವುಗಳಿಗೆ ಯಾವುದೇ ಸಂದರ್ಭದಲ್ಲಿಯೂ ವಿಳಂಬಕ್ಕೆ ಆಸ್ಪದ ನೀಡದೇ, ಅಧಿಕಾರಿಗಳು ತಮ್ಮನ್ನು ನೇರವಾಗಿ ಸಂಪರ್ಕಿಸಿ, ಕಡತಗಳಿಗೆ ಅನುಮೋದನೆ ಪಡೆಯುವಂತೆ ತಿಳಿಸಿದರು.


