ಮಂಗಳೂರು: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ 20 ಸಾವಿರ ಫಲಾನುಭವಿಗಳ ನೋಂದಣಿ ಗುರಿಯನ್ನು ಈ ಮಾಸಾಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದ ನಳಿನ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ ಜಿಲ್ಲಾ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀರಿನ ಸಮಸ್ಯೆ ನಗರದಲ್ಲಿ ಉಂಟಾಗಿರುವುದರಿಂದ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು, ಜಲಜೀವನ್ ಮಿಶನ್ ಅಡಿ ನೀರು ಪೂರೈಕೆಯನ್ನು ತುರ್ತುಗೊಳಿಸಬೇಕು ಎಂದು ಸೂಚನೆ ನೀಡಿದರು.
ಜಲಜೀವನ್ ಮಿಶನ್ ಯೋಜನೆ ಅಡಿ 90 ಸಾವಿರ ಮನೆಗಳಿಗೆ ಪೈಪ್ಲೈನ್ ಸಂಪರ್ಕ ಒದಗಿಸಬೇಕಾಗಿದ್ದು, ಈಗಾಗಲೇ ಸುಮಾರು 50,000 ಮನೆಗಳ ಸಂಪರ್ಕ ಪೂರ್ಣಗೊಂಡಿದೆ.40 ಸಾವಿರ ಮನೆಗಳಿಗೆ ಸಂಪರ್ಕ ಕಲ್ಪಿಸಬೇಕಾಗಿದೆ. ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಮಾತನಾಡಿ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಅಡ್ಯಾರ್ನಲ್ಲಿ ಡ್ಯಾಂ ನಿರ್ಮಾಣ ಮಾಡಲಾಗಿದೆ. ಪೈಪ್ಲೈನ್ ಹಾಕಲಾಗಿದೆ. ಆದರೆ ನೀರಿನ ಮೂಲ ಯಾವುದು ಎಂದು ಪ್ರಶ್ನಿಸಿದರು.
ಸರಿಯಾದ ಯೋಜನೆ ಇಲ್ಲದೆ ಪಾಲಿಕೆಯಿಂದ ಅನುಮತಿ ಕೂಡ ಪಡೆಯದೇ ನೀರು ಸರಬರಾಜು ಮಾಡಲಾಗುತ್ತಿದೆ. ನಗರದ ಜನರೇ ಈಗಾಗಲೇ ನೀರಿಲ್ಲದೆ ಸಮಸ್ಯೆ ಅನುಭವಿಸುತ್ತಿದ್ದಾರೆ. ಗ್ರಾಮಾಂತರ ಭಾಗಗಳಿಗೆ ಮಂಗಳೂರಿಗೆ ಪೂರೈಕೆ ಆಗುವ ಜಲಮೂಲದಿಂದ ನೀರು ಪೂರೈಕೆಯಾಗುತ್ತಿದೆ. ಪಾಲಿಕೆಗೆ ಒಂದು ರೂಪಾಯಿ ಕೂಡ ನೀಡುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಮೂಡಬಿದರೆ ಹಾಗೂ ಉಳಾಯಿಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಶೇ 80 ರಷ್ಟು ಪೂರ್ಣಗೊಳಿಸ ಲಾಗಿದೆ. ಏಪ್ರಿಲ್ನೊಳಗೆ ಸಂಪೂರ್ಣಗೊಳ್ಳಲಿದೆ. ಇಳಂತಿಲ ಯೋಜನೆ ಶೇ 30ರಷ್ಟು ಪೂರ್ಣಗೊಂಡಿದೆ ಎಂದು ಜಿ.ಪಂ. ಕಾರ್ಯನಿರ್ವಾಹಕ ಎಂಜಿನಿಯರ್ ಸಭೆಗೆ ತಿಳಿಸಿದರು.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಕುರಿತು ಜಿಲ್ಲಾ ಕೈಗಾರಿಕೆಗಳ ಜಂಟಿ ನಿರ್ದೇಶಕ ಗೋಕುಲದಾಸ್ ಅವರು ಮಾಹಿತಿ ನೀಡಿ, ಈಗಾಗಲೇ 14,455 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಕೆಲ ದಿನಗಳಿಂದ ಸರ್ವರ್ ಸಮಸ್ಯೆ ಯಿಂದಾಗಿ ದಾಖಲಾತಿಯಲ್ಲಿ ವಿಳಂಬವಾಗಿದೆ. ಫಲಾನುಭವಿಗಳ ಹೆಸರನ್ನು ನೋಂದಾಯಿಸಲು ವಿವಿಧ ಸ್ಥಳಗಳಲ್ಲಿ ಶಿಬಿರಗಳನ್ನು ನಡೆಸಲಾಗುತ್ತದೆ ಎಂದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಡಿಎಫ್ ಒ ಆ್ಯಂಟನಿ ಎಸ್. ಮರಿಯಪ್ಪ, ಪಾಲಿಕೆ ಆಯುಕ್ತ ಆನಂದ್ ಇದ್ದರು.