ಬ್ರಹ್ಮಾವರ: ಮನೆಯಲ್ಲಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಎಂಬಲ್ಲಿ ನಡೆದಿದೆ.
ಹತ್ಯೆಯಾದ ಯುವಕ ಕೃಷ್ಣ (36) ಎಂದು ಗುರುತಿಸಲಾಗಿದೆ. ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣ, ರಾತ್ರಿ ಮನೆಯಲ್ಲಿ ಏಕಾಂಗಿಯಾಗಿ ಊಟ ಮಾಡುತ್ತಿದ್ದ ವೇಳೆ ಬಂದ ದುಷ್ಕರ್ಮಿಗಳು ಪಿಸ್ತೂಲಿನಿಂದ ಗುಂಡಿಕ್ಕಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಗಂಭೀರವಾಗಿ ಗಾಯಗೊಂಡ ಕೃಷ್ಣ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಫೈರಿಂಗ್ ಶಬ್ದ ಕೇಳಿದ್ದ ಪಕ್ಕದ ಮನೆಯವರು ಪಟಾಕಿ ಶಬ್ದ ಇರಬೇಕು ಎಂದು ಸುಮ್ಮನೆ ಇದ್ದರು. ಬೆಳಿಗ್ಗೆ ಈ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.