ಕಾರವಾರ: ಪ್ರಸಕ್ತ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಜೂನ್ 7 ರಿಂದ 9 ರವರೆಗೆ ಕಾರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ಈ ಪರೀಕ್ಷೆಗಳು ಅತ್ಯಂತ ಪಾರದರ್ಶಕವಾಗಿ ನಡೆಯುವಂತೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಶ್ನೆ ಪತ್ರಿಕೆಗಳನ್ನು ಸೂಕ್ತ ಭದ್ರತೆಯೊಂದಿಗೆ ಜಿಲ್ಲಾ ಖಜಾನೆಯಲ್ಲಿ ಇಡಬೇಕು. ಪರೀಕ್ಷಾ ಗೌಪ್ಯ ಸಾಮಗ್ರಿಗಳ ಬಂಡಲ್ಗಳನ್ನು ಸ್ವೀಕರಿಸಿ ಖಜಾನೆಯಲ್ಲಿ ಭದ್ರಪಡಿಸಲು ಹಾಗೂ ಪರೀಕ್ಷಾ ದಿನ ಮಾರ್ಗಾಧಿಕಾರಿಗಳಿಗೆ ವಿತರಿಸಲು ಜಿಲ್ಲಾ ತ್ರಿಸದಸ್ಯ ಸಮಿತಿ ರಚಿಸುವಂತೆ ತಿಳಿಸಿದರು.
ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ವೀಕ್ಷಕರನ್ನು ನೇಮಿಸುವಂತೆ ಮತ್ತು ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು ಮಾರ್ಗಾಧಿಕಾರಿ ನೇಮಕ ಮಾಡಬೇಕು.ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಪೋಲೀಸ್ ಬಂದೋಬಸ್ತ್ ಹಾಗೂ ಮಾರ್ಗಾಧಿಕಾರಿಗಳಿಗೆ ಪೋಲೀಸ್ ಭದ್ರತೆ ಒದಗಿಸುವಂತೆ ಪೂಲೀಸ್ ಇಲಾಖೆಗೆ ತಿಳಿಸಿದರು.
ಪರೀಕ್ಷಾ ಕೇಂದ್ರಕ್ಕೆ ಬರುವ ಪರೀಕ್ಷಾರ್ಥಿಗಳ ಆರೋಗ್ಯದಲ್ಲಿ ಆಕಸ್ಮಿಕ ತೊಂದರೆ ಉಂಟಾದಲ್ಲಿ ತಾತ್ಕಾಲಿಕ ವೈದ್ಯಕೀಯ ಉಪಚಾರ ಒದಗಿಸುವ ಬಗ್ಗೆ ಆರೋಗ್ಯ ಸಿಬ್ಬಂದಿ ನೇಮಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚನೆ ನೀಡಿದರು.
ಪರೀಕ್ಷೆಗಳು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿ, ಇಲಾಖಾ ಪರೀಕ್ಷೆಗಳಲ್ಲಿ ಯಾವುದೇ ತರಹದ ಅವ್ಯವಹಾರಗಳು ನಡೆಯದಂತೆ ಹಾಗೂ ಪರೀಕ್ಷಾ ಪಾವಿತ್ರ್ಯತೆ ಗೆ ಧಕ್ಕೆಯಾಗದಂತೆ ಶಿಸ್ತುಬದ್ಧವಾಗಿ ಪರೀಕ್ಷೆ ನಡೆಸುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಇದ್ದರು.