ಮಂಗಳೂರು: ರಸ್ತೆಯ ಮೇಲೆ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುರಿತು ಹೇಳಿಕೆ ನೀಡಿದ ಶರಣ್ ಪಂಪ್ವೆಲ್ ಅವರ ವಿರುದ್ಧ ದಾಖಲಿಸಿರುವ ಪ್ರಕರಣ ವಾಪಸ್ ಪಡೆಯಬೇಕು. ಇಲ್ಲದೇ ಇದ್ದಲ್ಲಿ ಹೊದಲ್ಲಿ ಇದಕ್ಕೆ ತಕ್ಕ ಉತ್ತರ ನೀಡಬೇಕಾದಿತು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದ್ದಾರೆ.
ರಸ್ತೆಯಲ್ಲಿ ನಿಂತು ನಮಾಜ್ ಮಾಡಿದವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಅಧಿಕಾರಿ ಮೇಲೆ ಸಋಕಾರವು ಶಿಸ್ತುಕ್ರಮ ಜರುಗಿಸಿದೆ. ಈ ಪ್ರಕರಣದಲ್ಲಿ ತರಾತುರಿಯಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಆದರೆ, ಕೇವಲ ಹೇಳಿಕೆ ನೀಡಿರುವುದನ್ನೆ ಮಹಾ ಅಪರಾಧ ಎಂಬಂತೆ ಶರಣ್ ಪಂಪ್ವೆಲ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಇದು ಸರ್ಕಾರದ ಹಿಂದೂ ವಿರೋಧಿ ನಿಲುವು ದಬ್ಬಾಳಿಕೆ ಎಂದು ಆಕ್ರೋಶ ಹೊರಹಾಕಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರವು ಅಸ್ತಿತ್ವಕ್ಕೆ ಬಂದ ನಂತರ ಗೂಂಡಾ ರಾಜಕಾರಣ ಜಾಸ್ತಿ ಆಗಿದೆ. ಹುಬ್ಬಳ್ಳಿ ಘಟನೆ ಬಳಿಕ, ಅಂತಹ ಅನೇಕ ಕೃತ್ಯಗಳು ವಿವಿಧೆಡೆ ಮರುಕಳಿಸಿವೆ. ರಾಜ್ಯದಾದ್ಯಂತ ಅಶಾಂತಿಯ ವಾತಾವರಣ ಉಂಟಾಗುತ್ತಿದೆ. ಕೋಮುವಾದ ಹರಡುವ ಮೂಲಕ ಭಯೋತ್ಪಾದನೆ ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದರು.
ವಿಧಾನಸೌಧದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದರೆ, ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದರೂ ಈ ಸರಕಾರ ಯಾವುದೇ ಕ್ರಮ ಕೈಗೊಳ್ಳಲ್ಲ. ಸಂಸತ್ ಸದಸ್ಯನಾಗಿ ಅವಧಿ ಮುಗಿದ ಬಳಿಕ ಮುಂದಿನ ನಡೆ ಏನು ಎಂಬ ಪ್ರಶ್ನೆಗೆ, ನಾನು ಯಾವತ್ತೂ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿರಲು ಬಯಸುತ್ತೇನೆ. ಸಾಮಾನ್ಯ ಕಾರ್ಯಕರ್ತನಾಗಿಯೇ ಇರುತ್ತೇನೆ ಎಂದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ಡಾ.ವೈ. ಭರತ್ ಶೆಟ್ಡಿ, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಮಂಜುಳಾ ರಾವ್, ಪಕ್ಷದ ಮುಖಂಡರಾದ ವಿಕಾಸ್ ಪುತ್ತೂರು, ಯತೀಶ್, ಹರಿಕೃಷ್ಣ ಬಂಟ್ವಾಳ ಇದ್ದರು.