Breaking News

ಹಿಂದುಳಿದ ತಾಲ್ಲೂಕಿನ ವಿಭಾಗದಲ್ಲಿ ಗುರುತಿಸಿದ್ದಕ್ಕೆ ಕೀಳರಿಮೆ ಬೇಡ: ಜಿ.ಪಂ. ಸಿಇಒ ಈಶ್ವರ ಕಾಂದೂ

 

ಮುಂಡಗೋಡ:  ತಾಲೂಕನ್ನು ಹಿಂದುಳಿದ ತಾಲೂಕಿನ ವಿಭಾಗದಲ್ಲಿ ಗುರುತಿಸಿರುವುದಕ್ಕೆ ಜನರು ಕೀಳರಿಮೆ ಭಾವನೆ ಹೊಂದುವ ಬದಲು,  ಸಿಕ್ಕ ಅವಕಾಶವನ್ನು ಸದುಪಯೋಗ ಪಡೆಸಿಕೊಂಡಾಗ ಮಾತ್ರ ಜಿಲ್ಲೆಯಲ್ಲಿಯೇ ಮಾದರಿ ತಾಲ್ಲೂಕು ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕುಮಾರ್ ಕಾಂದೂ ಹೇಳಿದರು.

ಸೋಮವಾರ ಮುಂಡಗೋಡ ತಾಲ್ಲೂಕಿನ ದೈವಜ್ಞ ಕಲ್ಯಾಣ ಮಂಟಪದಲ್ಲಿ ಅಭಿವೃದ್ಧಿ ಆಕಾಂಕ್ಷಿ ತಾಲೂಕು ಕಾರ್ಯಕ್ರಮದ ಅಡಿಯಲ್ಲಿ ನಡೆದ ಸಂಪೂರ್ಣತಾ ಅಭಿಯಾನದ ಸಮಾರೂಪವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೂರು ತಿಂಗಳಿನಿಂದ ನಡೆದ ಅಭಿಯಾನದಲ್ಲಿ ನಿಗದಿಪಡಿಸಲಾಗಿದ್ದ 6 ಸೂಚ್ಯಂಕಗಳ ಪೈಕಿ 5 ಸೂಚ್ಯಂಕಗಳಲ್ಲಿ 100 ಪ್ರತಿಶತ ಗುರಿ ಸಾಧಿಸಿರುವುದು ಹೆಮ್ಮೆಯ ಸಂಗತಿ. ಕಡಿಮೆ ಅವಧಿಯಲ್ಲಿ ಈ ಎಲ್ಲ ಅಂಶಗಳಲ್ಲಿ ಗುರಿ ಸಾಧಿಸುವುದು ಸಣ್ಣ ವಿಷಯವಲ್ಲ. ಆದರೆ ತಾಲೂಕಿನ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಮಹಿಳೆಯರು ಮತ್ತು ಸಾರ್ವಜನಿಕರ ಸಹಕಾರ ಮಹತ್ವದ್ದಾಗಿತ್ತು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಆಕಾಂಕ್ಷಿ

ಕಾರ್ಯಕ್ರಮದ ನಿಗದಿತ ಎಲ್ಲ ಸೂಚ್ಯಂಕಗಳಲ್ಲಿ ಗುರಿ ಸಾಧಿಸಿ, ತಾಲೂಕಅನ್ನು ಅಭಿವೃದ್ಧಿ ಹೊಂದಿದ ತಾಲೂಕಾಗಿ ರೂಪಿಸಲು ಎಲ್ಲರೂ ಶ್ರಮಿಸೋಣ ಎಂದರು.

  1.  

ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ್ ಅವರು ಮಾತನಾಡಿ, ತಾಲೂಕಿನಲ್ಲಿ ಕಳೆದ ಮೂರು ತಿಂಗಳಿನಿಂದ ನಿರಂತರವಾಗಿ ಕಾರ್ಯಕ್ರಮಗಳು, ತರಬೇತಿ, ಮನೆ ಮನೆ ಭೇಟಿ, ಸ್ಪರ್ಧೆಗಳು, ಕಾರ್ಯಾಗಾರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅಭಿಯಾನ ಯಶಸ್ವಿಗೊಳಿಸಲಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ, ಶಿಶುಗಳಿಗೆ ಅನ್ನಪ್ರಾಸನ,  ಜನ್ಮದಿನ ಆಚರಣೆ ನಡೆಸಲಾಯಿತು. ನಂತರ ಅಭಿಯಾನದ ಯಶಸ್ಸಿಗೆ ಕಾರಣವಾದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಮತ್ತು ಅಭಿಯಾನದ ವೇಳೆ ವಿವಿಧ ಕಾರ್ಯಕ್ರಮದಲ್ಲಿ ಶ್ರಮವಹಿಸಿದ ಎಲ್ಲರಿಗೆ ಪ್ರಶಂಸನಾ ಪತ್ರ ನೀಡಿ, ಅಭಿನಂದಿಸಲಾಯಿತು.

ತಾಲೂಕಿನ ಸಾಲಗಾಂವ ಗ್ರಾಮದಲ್ಲಿ ಎನ್.ಆರ್.ಎಲ್.ಎಂ. ಸಂಜೀವಿನಿ ಒಕ್ಕೂಟದ ಶ್ರೀ ಗಜಲಕ್ಷ್ಮೀ ಮಹಿಳಾ ಸ್ವ ಸಹಾಯ ಸಂಘದ ನೂತನ ಶ್ರೀ ಸಾಯಿ ಶೇಂಗಾ ಚಿಕ್ಕಿ ತಯಾರಿಕಾ ಘಟಕವನ್ನು ಉದ್ಘಾಟಿಸಿ, ಘಟಕವನ್ನು ವೀಕ್ಷಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಬಳಿಕ ನಾಗನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂತನವಾಗಿ ಆರಂಭಿಸಿದ ಸಂಜೀವಿನಿ ಡಿಜಿ ಶಾಲಾ ಕೇಂದ್ರವನ್ನು ಉದ್ಘಾಟಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ. ವೈ. ದಾಸನಕೊಪ್ಪ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಶ್ವರಿ ಕದಂ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮು ಬಯಲುಸೀಮೆ, ತಾಲೂಕು ಆಸ್ಪತ್ರೆ ಆಡಳಿತ ಅಧಿಕಾರಿ ಡಾ. ಭರತ, ಪಶು ಇಲಾಖೆಯ ಅಧಿಕಾರಿ ಕೃಷ್ಣಮೂರ್ತಿ ಹೆಗಡೆ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಎಸ್. ಕುಲಕರ್ಣಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸ್ವ ಸಹಾಯ ಸಂಘದ ಸದಸ್ಯರು, ಸಾರ್ವಜನಿಕರು ಇದ್ದರು.

  1.  

Leave a Reply

Your email address will not be published. Required fields are marked *