ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವಿವಿಧ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಬ್ಯಾಂಕ್ ಗಳಿಗೆ ಸಲ್ಲಿಕೆ ಆಗುವ ಸಾಲದ ಅರ್ಜಿಗಳನ್ನು ವಿಳಂಬಕ್ಕೆ ಆಸ್ಪದ ನೀಡದೇ ಶೀಘ್ರದಲ್ಲಿ ಸಲ ಮಂಜೂರು ಮಾಡುವಂತೆ ಎಲ್ಲಾ ಬ್ಯಾಂಕ್ ಗಳ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಡಾ. ದಿಲೀಷ್ ಶಶಿ ಅವರು ನಿರ್ದೇಶನ ನೀಡಿದರು.
ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಸಂಬಂದಪಟ್ಟ ಇಲಾಖೆಗಳ ಮೂಲಕ ಬ್ಯಾಂಕ್ ಗಳಿಗೆ ಸಲ್ಲಿಕೆಯಾಗುವ ಅರ್ಜಿಗಳನ್ನು ವಿನಾ ಕಾರಣ ವಿಳಂಬ ಮಾಡದೇ ಮತ್ತು ದಾಖಲೆಗಳ ಕೊರತೆಯಿಂದ ಅರ್ಜಿಯನ್ನು ತಿರಸ್ಕರಿಸದೇ, ಅಗತ್ಯವಿರುವ ಹೆಚ್ಚುವರಿ ದಾಖಲೆಗಳನ್ನು ಫಲಾನುಭವಿಗಳಿಂದ ಪಡೆದು, ಸಾಲವನ್ನು ಮಂಜೂರು ಮಾಡುವ ಮೂಲಕ ಸರ್ಕಾರಿ ಯೋಜನೆ ನೆರವನ್ನು ಒದಗಿಸುವಂತೆ ಸೂಚನೆ ನೀಡಿದ ಅವರು, ಫಲಾನುಭವಿಗಳಿಂದ ಬ್ಯಾಂಕ್ ಗಳಿಗೆ ಸಲ್ಲಿಕೆಯಾದ ಅರ್ಜಿಗಳ ಪ್ರಗತಿ ಕುರಿತು ಸಂಬಂದಪಟ್ಟ ಇಲಾಖೆಗಳ ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸಬೇಕು ಎಂದರು.
ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮ ಯೋಜನೆ ಮತ್ತು ಪ್ರಧಾನ ಮಂತ್ರಿ ಭೀಮಾ ಸುರಕ್ಷಾ ಯೋಜನೆ ಬಗ್ಗೆ ಗ್ರಾಹಕರಲ್ಲಿ ಹೆಚ್ಚಿನ ಅರಿವು ಮೂಡಿಸುವುದರ ಜೊತೆಗೆ ಇದರ ನೋಂದಣಿ ಸಂಖ್ಯೆಯನ್ನು ಹೆಚ್ಚಿಸಲು ಬ್ಯಾಂಕ್ಗಳಿಗೆ ಸೂಚಿಸಿರು.
ಎಲ್ಲ ಬ್ಯಾಂಕ್ ಗಳು ಸಾಲ ಮೇಳ ಆಯೋಜಿಸುವ ಮೂಲಕ ಸಾರ್ವಜನಿಕರಿಗೆ ಬ್ಯಾಂಕ್ ಗಳಲ್ಲಿರುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು, ಶೈಕ್ಷಣಿಕ ಮತ್ತು ವಸತಿ ವಲಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ವಿತರಿಸಲು ಕ್ರಮ ಕೈಗೊಳ್ಳಬೇಕು. ಕ್ರೆಡಿಟ್ ಹಿಸ್ಟರಿ ಇಲ್ಲ ಎಂದು ಸಾಲದ ಅರ್ಜಿಗಳನ್ನು ತಿರಸ್ಕರಿಸಬಾರದು , ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಸಾಕ್ಷರತಾ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಜನತೆಗೆ ಬ್ಯಾಂಕಿAಗ್ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಪಿಎಂ ಜನಧನ್ ಯೋಜನೆ ಅಡಿ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಿಡಿಂಗ್ ಕಾರ್ಯದಲ್ಲಿ ನಿಗಧಿತ ಗುರಿ ಸಾಧಿಸುವಂತೆ ಹಾಗೂ ಸರ್ಕಾರದ ವಿವಿಧ ಯೋಜನೆಗಳಾದ ಪಿಎಂ ಸ್ವನಿಧಿ, ಪಿಎಂ ಉದ್ಯೋಗ ಸೃಜನಾ ಯೋಜನೆ (ಪಿಎಂಇಜಿಪಿ), ಪಿಎಂಎಫ್ಎಂಇ, ಯೋಜನೆಗಳ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಮೂಲಕ ಸರ್ಕಾರದ ಯೋಜನೆಗಳ ಸೌಲಭ್ಯ ಅರ್ಹರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದರು.
ಕೆನರಾ ಬ್ಯಾಂಕ್ನ ಪ್ರಾದೇಶಿಕ ಮ್ಯಾನೇಜರ್ ನಾಗರಾಜ ರೆಡ್ಡಿ ಅವರು ಮಾತನಾಡಿ, 2025ರ ಜೂನ್ ಅಂತ್ಯದವರೆಗೆ ಜಿಲ್ಲೆಯಲ್ಲಿ ಕೃಷಿ ಕ್ಷೇತ್ರಕ್ಕೆ ರೂ. 1522 ಕೋಟಿ , ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ರೂ.1123 ಕೋಟಿ, ಶೈಕ್ಷಣಿಕ ವಲಯಕ್ಕೆ 9 ಕೋಟಿ, ವಸತಿ ವಲಯಕ್ಕೆ 14 ಕೋಟಿ ಸಾಲ ವಿತರಿಸಲಾಗಿದೆ, ರೂ. 24527 ಕೋಟಿ ಠೇವಣಿ ಸಂಗ್ರಹಿಸಲಾಗಿದ್ದು ಸಾಲ ಮತ್ತು ಠೇವಣಿ ಅನುಪಾತದ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರಸಕ್ತ ವರ್ಷದಲ್ಲಿ ಜಿಲ್ಲೆಯಲ್ಲಿ ರೂ.9980.25 ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದೆ ಎಂದರು.
ಆರ್.ಬಿ.ಐ ಪ್ರತಿನಿಧಿ ಮಣಿರಾಜ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕರೀಂ ಅಸದಿ, ನಬಾರ್ಡ್ ಡಿಡಿಎಂ ಸುಶೀಲ್ ನಾಯ್ಕ , ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಜಪ್ಪ , ವಿವಿಧ ಬ್ಯಾಂಕ್ಗಳ ವ್ಯವಸ್ಥಾಪಕರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.