

ಮಂಗಳೂರು: ಸಹಕಾರ ರಂಗವು ದೇಶದ ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗೆ ಒತ್ತು ನೀಡುವ ಮೂಲಕ ಗ್ರಾಮೀಣ ಜನರಿಗೆ ಶಕ್ತಿ ನೀಡಿದೆ. ದೇಶದ ಅಭಿವೃದ್ಧಿಗೆ ಸಹಕಾರ ರಂಗವು ಅಪಾರ ಕೊಡುಗೆ ನೀಡುತ್ತಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು ಎಂಬ ಧ್ಯೇಯ ವಾಕ್ಯ ದೊಂದಿಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ 2025 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಜನರ, ಮಹಿಳೆಯರ ಸ್ವಾವಲಂಬನೆ ಗೆ ದೇಶದಾದ್ಯಂತ ವ್ಯಾಪಿಸಿರುವ ಸಹಕಾರ ಸಂಸ್ಥೆಗಳು ಕೊಡುಗೆ ನೀಡಿದೆ. ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ. ಕರಾವಳಿಯಲ್ಲಿ ಮಹಿಳೆಯರ ಸ್ವಾಭಿಮಾನದ ಬದುಕಿಗೆ ಸಹಕಾರ ಕ್ಷೇತ್ರ ಮಹತ್ವದ ಕೊಡುಗೆ ನೀಡಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳು ಸಾಲ ನೀಡಲು ಹಿಂದೇಟು ಹಾಕಿದ ಸಂದರ್ಭದಲ್ಲಿ ರಾಜೇಂದ್ರ ಕುಮಾರ್ ಅವರ ನೇತೃತ್ವದ ಸಹಕಾರಿ ಬ್ಯಾಂಕ್ ಸಾಲ ನೀಡಿ ಹಲವು ಸಂಸ್ಥೆಗಳ ನಿರ್ಮಾಣಕ್ಕೆ ಕಾರಣ ಆಗಿದ್ದಾರೆ ಎಂದರು.
ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಸ್ವಾಗತಿಸಿ ಮಾತನಾಡಿ, ಸಹಕಾರ ಬ್ಯಾಂಕ್ ಜಿಲ್ಲೆಯ ಜನರ ಆರ್ಥಿಕ ಅಗತ್ಯಗಳಿಗೆ ಸ್ಪಂದಿಸುತ್ತಾ ಬಂದಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸರಿಸಾಟಿಯಾಗಿ ರೈತರ ಆರ್ಥಿಕ ಅಗತ್ಯಗಳಿಗೆ ಶಿಕ್ಷಣ, ಮದುವೆ ಸೇರಿದಂತೆ ತುರ್ತು ಅಗತ್ಯಗಳಿಗೆ ಸ್ಪಂದಿಸಿದೆ ಎಂದರು.


ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು ಮಾತನಾಡಿ, ಸಹಕಾರ ರಂಗದ ಮೂಲಕ ಮಹಿಳೆಯರ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದು ಶ್ಲಾಘನೀಯ. ಸಹಕಾರ ಸರ್ವರ ಅಭಿವೃದ್ಧಿಗೆ ಪಕ್ಷಾತೀತವಾಗಿ, ಜಾತ್ಯತೀತವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಅವರು ಮಾತನಾಡಿ, ದೇಶದಲ್ಲಿಎಂಟೂವರೆ ಲಕ್ಷ ಸಹಕಾರ ಸಂಘಗಳು ದೇಶ ಕಟ್ಟುವ ಕೆಲಸದಲ್ಲಿ ತೊಡಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಹಕಾರ ಸಂಘಗಳ ಮೂಲಕ ಸಾಲ ನೀಡಿ ರೈತರನ್ನು ಬೆಂಬಲಿಸಿದೆ ಎಂದರು.
ಸಮಾರಂಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜ, ಡಾ.ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಶಾಸಕ ಯಶ್ ಪಾಲ್ ಎ.ಸುವರ್ಣ, ನಬಾರ್ಡ್ ಮುಖ್ಯ ಪ್ರಬಂಧಕ ಡಾ.ಸುರೇಂದ್ರ ಬಾಬು, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಎಸ್ ಸಿಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಐಕಳ ದೇವಿ ಪ್ರಸಾದ್ ಶೆಟ್ಟಿ, ಜಯರಾಜ ರೈ, ಮೋನಪ್ಪ ಶೆಟ್ಟಿ ಎಕ್ಕಾರ್, ಭಾಸ್ಕರ ಕೋಟ್ಯಾನ್, ಟಿ.ಜಿ.ರಾಜರಾಮಭಟ್ ಸದಾಶಿವ ಉಳ್ಳಾಲ್, ಶಶಿ ಕುಮಾರ್ ರೈ ಬಾಲ್ಯೋಟ್ಟು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಹಕಾರ ಮಹಾ ಮಂಡಳದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್.ನವೀನ್, ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಕರ್ನಾಟಕ ಸಹಕಾರ ಸಂಘಗಳ ರಾಜ್ಯ ನಿಬಂಧಕ ಟಿ.ಎಚ್.ಎಂ.ಕುಮಾರ್,ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಸಹಕಾರಿ ಇಲಾಖೆಯ ಉಪ ರಿಜಿಸ್ಟ್ರಾರ್ ರಮೇಶ್ ಇದ್ದರು.
ಶಿಕ್ಷಣ ನಿಧಿಗೆ 1.62 ಕೋಟಿ ಹಸ್ತಾಂತರಿಸಿದ ರಾಜೇಂದ್ರ ಕುಮಾರ್
ಸಹಕಾರ ಮಾಣಿಕ್ಯ ಪ್ರಶಸ್ತಿಯನ್ನು 3 ಸಹಕಾರ ಸಂಸ್ಥೆಗಳಿಗೆ ನೀಡಲಾಯಿತು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಲಾ 1 ಉತ್ತಮ ಕೃಷಿಪತ್ತಿನ ಸಹಕಾರಿ ಸಂಘಗಳನ್ನು ಹಾಗೂ 1 ಪತ್ತಿನ ಸಹಕಾರಿ ಸಂಘವನ್ನು ಸಹಕಾರ ಮಾಣಿಕ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯ ಜತೆಗೆ 5 ಗ್ರಾಂ ಚಿನ್ನದ ಪದಕ. 10 ಸಾವಿರ ರೂಪಾಯಿ ನಗದು ಹಾಗೂ ಪಾರಿತೋಷಕ ನೀಡಲಾಯಿತು. ಸಾಮಾನ್ಯ ವಿಭಾಗದಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ ಉಭಯ ಜಿಲ್ಲೆಗಳಲ್ಲಿ ಒಂದರಂತೆ ಹಾಗೂ ಹೈನುಗಾರಿಕೆ ಕ್ರೆಡಿಟ್ ಸೊಸೈಟಿ, ಮೀನುಗಾರಿಕಾ ಸಹಕಾರಿ ಸಂಘ, ಸೌಹಾರ್ದ ಸಹಕಾರಿ ಸಂಘ ಹಾಗೂ ಮಹಿಳಾ ಸಹಕಾರಿ ಸಂಘಕ್ಕೆ ಉಭಯ ಜಿಲ್ಲೆಗಳಿಂದ 1 ಹಾಗೂ ವಜ್ರ ಮಹೋತ್ಸವ ಮತ್ತು ಸುವರ್ಣ ಮಹೋತ್ಸವ ಪೂರೈಸಿದ ಸಂಘಗಳನ್ನು ಗೌರವಿಸಲಾಯಿತು.
ಸ್ವ ಸಹಾಯ ಸಂಘಗಳು ಸೇರಿದಂತೆ ವಿವಿಧ ಸಂಸ್ಥೆ ಗಳ ವಸ್ತು ಪ್ರದರ್ಶನ ಮಳಿಗೆಗಳನ್ನು ತೆರೆಯಲಾಗಿತ್ತು. ‘ಸಹಕಾರ ‘ಸ್ಮರಣ ಸಂಚಿಕೆ ಬಿಡುಗಡೆ ಗೊಳಿಸಲಾಯಿತು.
ಎಸ್ ಸಿ ಡಿ ಸಿ ಸಿ ಬ್ಯಾಂಕ್ ವತಿಯಿಂದ ರಾಜ್ಯ ಸಹಕಾರ ಮಹಾಮಂಡಳದ ಶಿಕ್ಷಣ ನಿಧಿಗೆ 1.62 ಕೋಟಿ ರೂಪಾಯಿಗಳನ್ನು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡರ ಮೂಲಕ ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹಸ್ತಾಂತರಿಸಿದರು.

