
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ಕ ಪಡೆ ಯೋಜನೆಯು ಅನುಷ್ಠಾನಗೊಂಡಿದ್ದು, ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಹಾಗೂ ಅವರ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಕ್ಕ ಪಡೆ ಯೋಜನೆಯ ವಾಹನಕ್ಕೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಹೇಳಿದರು.
ಬುಧವಾರ ಅಕ್ಕಪಡೆಗೆ ಚಾಲನೆ ನೀಡಿ ಅವರು ಮಾತನಾಡಿ, ರಾಜ್ಯ ಸರ್ಕಾರವು ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣವೇ ರಕ್ಷಣೆ ನೀಡುವ ಉದ್ದೇಶದಿಂದ 31 ಜಿಲ್ಲೆಗಳಲ್ಲಿ ಅಕ್ಕಪಡೆ ಯೋಜನೆ ಜಾರಿಗೆ ಬಂದಿದ್ದು, 5 ಮಹಿಳಾ ಗೃಹ ರಕ್ಷಕರ ತಂಡ ರಚಿಸಲಾಗಿದೆ. ಅವರು ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣವೇ ರಕ್ಷಣೆ ನೀಡುವುದು ಅಕ್ಕ ಪಡೆ ಯೋಜನೆಯ ಪ್ರಾಥಮಿಕ ಉದ್ದೇಶ. ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಚಾಲಿತ ಆಗಿರುವ ಅಕ್ಕ ಪಡೆ ಸಮಾಜದಲ್ಲಿ ಸ್ಪಂದಿಸುವ ಸುರಕ್ಷತಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದರು.
ದೌರ್ಜನ್ಯ, ಹಿಂಸೆ, ನಿರ್ಲಕ್ಷ್ಯ ಅಥವಾ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯಹಸ್ತ ಮತ್ತು ರಕ್ಷಣೆ ಒದಗಿಸುತ್ತದೆ. ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಘನತೆ ಮತ್ತು ಸಬಲೀಕರಣವನ್ನು ಉತ್ತೇಜಿಸುತ್ತದೆ. ಶಿಕ್ಷಣದ ಮೂಲಕ ಹಕ್ಕುಗಳು, ಕಾನೂನುಗಳು, ಸುರಕ್ಷತಾ ಕ್ರಮಗಳು ಮತ್ತು ಲಭ್ಯವಿರುವ ಬೆಂಬಲ ವ್ಯವಸ್ಥೆಗಳ ಬಗ್ಗೆ, ಜಾಗೃತಿ ಮೂಡಿಸುತ್ತದೆ. ಸಮಾಜದಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆದು ಕಾನೂನಿನ ರಕ್ಷಣೆಯೊಂದಿಗೆ ಭಯ ಮುಕ್ತ ವಾತಾವರಣ ಸೃಷ್ಟಿಸುತ್ತದೆ ಎಂದರು.

ಜಿಲ್ಲಾ ಮಟ್ಟದಲ್ಲಿ ಮಹಿಳಾ ಗೃಹ ರಕ್ಷಕರನ್ನೊಳಗೊಂಡ ‘ಅಕ್ಕಪಡೆ’ ತಂಡವು ಸ್ಥಳೀಯ ಪೊಲೀಸರ ನಿಕಟ ಸಹಯೋಗದೊಂದಿಗೆ ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಎರಡು ಪಾಳಿಗಳಲ್ಲಿ, ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ಮತ್ತು ಮಧ್ಯಾಹ್ನ 2 ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಿಸಲಿದೆ ಎಂದರು.
ತಂಡದ ಸದಸ್ಯರನ್ನು ಶಾಲೆ, ಕಾಲೇಜು, ಬಾಲಕಿಯರ, ಮಹಿಳಾ ಹಾಸ್ಟೆಲ್, ಬಸ್, ರೈಲ್ವೆ ನಿಲ್ದಾಣಗಳು, ಸ್ಥಳೀಯ ಮಾರುಕಟ್ಟೆ, ಪ್ರೇಕ್ಷಣಿಯ ಸ್ಥಳಗಳು, ಪವಿತ್ರ ಸ್ಥಳಗಳು ಮತ್ತು ಇತರ ಸೂಕ್ಷ್ಮ ಸ್ಥಳಗಳಲ್ಲಿ ನಿಯೋಜಿಸಲಾಗುತ್ತದೆ.
ಅಕ್ಕ ಪಡೆ ಯೋಜನೆಯ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸದಸ್ಯರು ಭಾಗವಹಿಸಿದ್ದರು.


