
ಮಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹೆಸರು ಹಾಗೂ ಸ್ವರೂಪವನ್ನು ಈ ಮೊದಲು ಇದ್ದ ಹಾಗೆಯೇ ಮುಂದುವರೆಸಬೇಕು ಎಂದು ಒತ್ತಾಯಿಸಿ ನಗರದ ಪುರಭವನ ಸಮೀಪದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಉಪವಾಸ ಸತ್ಯಾಗ್ರಹ ನಡೆಸಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರು ಈ ವೇಳೆ ಮಾತನಾಡಿ, ನರೇಗಾ ಯೋಜನೆಯ ಹೆಸರು ಬದಲಿಸುವ ಮೂಲಕ ಕೇಂದ್ರದ ಎನ್ ಡಿಎ ನೇತೃತ್ವದ ಸರ್ಕಾರ ಮಹಾತ್ಮ ಗಾಂಧಿ ಅವರನ್ನು ಎರಡನೇ ಬಾರಿ ಕೊಲೆ ಮಾಡಿರುವುದು ಖಂಡನೀಯ. ನರೇಗಾ ಮೂಲ ಸ್ವರೂಪವನ್ನೇ ಬದಲಾಯಿಸಲಾಗಿದ್ದು, ಎಲ್ಲ ರಾಜ್ಯಗಳಿಗೆ ಇದರಿಂದ ಆರ್ಥಿಕ ಹೊರೆ ಹೆಚ್ಚಾಗಲಿದೆ. ಕೇಂದ್ರ ಸರ್ಕಾರದ ಈ ಕ್ರಮ ಖಂಡಿಸಲಾಗುವುದು. ಹಿಂದೆ ಯುಪಿಎ ನೇತೃತ್ವದ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಕಾಯ್ದೆಯ ಮೂಲ ಸ್ವರೂಪ ಉಳಿಸಬೇಕು ಎಂದು ಆಗ್ರಹಿಸಿ, ಫೆ. 9 ರಿಂದ 12 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಿಂದ ಮೂಲ್ಕಿವರೆಗೆ 100 ಕಿಲೋ ಮೀಟರ್ ಪಾದಯಾತ್ರೆ ನಡೆಸಿ, ಜನಜಾಗೃತಿ ಮೂಡಿಸಲಾಗುವುದು ಎಂದರು.
ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಾತನಾಡಿ, ಯುಪಿಎ ನೇತೃತ್ವದ ಸರಕಾರ ಅಧಿಕಾರದಲ್ಲಿ ಇದ್ದಾಗ ಆಹಾರ ಸುರಕ್ಷಾ ಕಾಯ್ದೆ, ಉದ್ಯೋಗ ಖಾತರಿ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ, ಶಿಕ್ಷಣ ಹಕ್ಕು ಕಾಯ್ದೆ ಯಂತಹ ಅನೇಕ ಜನಪರ ಕಾರ್ಯಕ್ರಮಗಳನ್ನು ಈ ದೇಶಕ್ಕೆ ನೀಡಿದೆ. ಕಾಂಗ್ರೆಸ್ ನಿಂದ ಈ ದೇಶದ ಬಡವರು, ಪರಿಶಿಷ್ಟರು, ಅಲ್ಪಸಂಖ್ಯಾತರು ಯಾರಿಗೂ ತೊಂದರೆ ನೀಡಿಲ್ಲ. ತೊಂದರೆ ಆಗಿದ್ದರೆ ಭೂ ಮಾಲೀಕರು, ಬಂಡವಾಳಶಾಹಿಗಳಿಗೆ ಆಗಿರಬಹುದು. ಕಾಂಗ್ರೆಸ್ ಜನಪರ ಧೋರಣೆಯಿಂದ ಕೆಲಸ ಮಾಡುತ್ತದೆ ಎಂದರು.

ಉಡುಪಿಯಲ್ಲಿ ಈಚೆಗೆ ನಡೆದ ಶ್ರೀಕೃಷ್ಣ ಮಠದ ಪರ್ಯಾಯದ ವೇಳೆ ಅಲ್ಲಿನ ಜಿಲ್ಲಾಧಿಕಾರಿ ಕೇಸರಿ ಧ್ವಜ ಹಾರಿಸಿದ್ದು ಸರಿಯಲ್ಲ. ದೇವಾಲಯದ ಕಾರ್ಯಕ್ರಮದಲ್ಲಿ ರಾಜಕೀಯ ಪ್ರೇರಿತ ಪತಾಕೆ ಹಾರಿಸಿರುವ ಅವರ ನಡೆಗೆ ಧಿಕ್ಕಾರ ಹಾಕಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಮಾತನಾಡಿ, 18 ಕೋಟಿ ಜನರಿಗೆ ಉದ್ಯೋಗ ನೀಡಿದ್ದ ಮನರೇಗಾ ಯೋಜನೆಯ ನಿಯಮಾವಳಿ ಬದಲಾಯಿಸಿರುವ ಕೇಂದ್ರ ಸರಕಾರ ಬಡವರ ಹೊಟ್ಟೆ ಮೇಲೆ ಹೊಡೆವ ಕೆಲಸ ಮಾಡಿದೆ. ನರೇಗಾ ಯೋಜನೆ ಜತೆಗೆ ಇರುವ ಮಹಾತ್ಮ ಗಾಂಧಿ ಅವರ ಹೆಸರನ್ನು ಸಹಿಸಲು ಆಗದೆ, ವಿಬಿ ಜಿ ರಾಮ್ ಜಿ ಎಂದು ಬದಲಿಸಿ, ರಾಮನ ಹೆಸರನ್ನು ತಂದು ಭಾವನಾತ್ಮಕತೆ ಸೃಷ್ಟಿಸುವ ದುರುದ್ದೇಶ ತೋರಿದೆ ಎಂದರು.
ಕಾಂಗ್ರೆಸ್ ಮುಖಂಡರಾದ ಜೆ.ಆರ್.ಲೋಬೊ, ಶಾಲೆಟ್ ಪಿಂಟೊ, ಪದ್ಮರಾಜ ಪೂಜಾರಿ, ಅಪ್ಪಿ, ವಿಶ್ವಾಸ್ ಕುಮಾರ್ ದಾಸ್ ಸೇರಿದಂತೆ ಹಲವರು ಇದ್ದರು.


