ಮಂಗಳೂರು: ಬುಧವಾರ ಮಂಗಳೂರಿನ ಬಲ್ಮಠದಲ್ಲಿ ದುರಂತದ ನಂತರ ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಆಗುವ ಅನಾಹುತವನ್ನು ತಪ್ಪಿಸಲು ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿವವರಗೆ ಯಾವುದೇ ಕಟ್ಟಡ ನಿರ್ಮಾಣ ಕಾಮಗಾರಿ ಮಾಡದಂತೆ ಆದೇಶ ಹೊರಡಿಸಿದೆ.
ಅವೈಜ್ಞಾನಿಕವಾಗಿ ಭೂ ಅಗೆತ ಮತ್ತು ಕಟ್ಟಡ ನಿರ್ಮಾಣ ಕಾಮಗಾರಿ ನಡೆಸುತ್ತಿರುವುದರಿಂದ ಭೂ ಕುಸಿತ ಉಂಟಾಗಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಉಂಟಾಗುತ್ತಿದೆ. ಜೀವ ಹಾನಿಯೂ ಆಗುತ್ತಿದೆ. ಇದರಿಂದಾಗಿ ಮಳೆ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ಕಟ್ಟಡ ಕಾಮಗಾರಿ ನಡೆಸದಂತೆ ಹಾಗೂ ಈಗಾಗಲೇ ಆರಂಭಿಸಿರುವ ಕಟ್ಟಡ ಕಾಮಗಾರಿಗಳನ್ನು ಮುನ್ನೆಚ್ಚರಿಕೆ ವಹಿಸಿಕೊಂಡು ನಡೆಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ಯಾವುದೇ ರೀತಿ ನಿಮಯ ಉಲ್ಲಂಘನೆ ಕಂಡು ಬಂದರೆ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.