ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತಗಳ ಜನಪ್ರತಿನಿಧಿಗಳಿಂದ ಆಯ್ಕೆ ಆಗುವ ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆ ದಿನ ಆಗಿದ್ದು, ನಾಮಪತ್ರಗಳ ಭರಾಟೆ ಜೋರಾಗಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಎಸ್ಡಿಪಿಐ ಪಕ್ಷದ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದರು.
ಮಂಗಳವಾರ ಒಬ್ಬ ಸ್ವತಂತ್ರ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದರು. ಇದರೊಂದಿಗೆ ಒಟ್ಟು ನಾಲ್ಕು ಮಂದಿ ನಾಮಪತ್ರ ಸಲ್ಲಿಸಿದಂತೆ ಆಗಿದೆ. ಬಿಜೆಪಿಯಿಂದ ಕಿಶೋರ್ ಕುಮಾರ್ ಪುತ್ತೂರು, ಕಾಂಗ್ರೆಸ್ನಿಂದ ರಾಜು ಪೂಜಾರಿ ಮತ್ತು ಎಸ್ಡಿಪಿಐನಿಂದ ಅನ್ವರ್ ಸಾದತ್ ಬಜತ್ತೂರು ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ನಾಮಪತ್ರ ಸಲ್ಲಿಕೆ ಮಾಡಿ ಮಾತನಾಡಿ, ಸಾಮಾನ್ಯ ಕಾರ್ಯಕರ್ತನಿಗೆ ದೊಡ್ಡ ಜವಾಬ್ದಾರಿಯನ್ನು ಪಕ್ಷವು ನೀಡಿದೆ. ಜವಾಬ್ದಾರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತೇನೆ. ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಕಾರ್ಯಕರ್ತರು ಹಾಗೂ ಮುಖಂಡರ ಜತೆಗೆ ಮಾತನಾಡಿ ಕೆಲಸ ಮಾಡುವೆ. ಪಕ್ಷದಲ್ಲಿ ಕೆಳ ಹಂತದಿಂದ ಕೆಲಸ ಮಾಡಿದ ಅನುಭವ ಹೊಂದಿದ್ದು, ಈ ಚುನಾವಣೆಯಲ್ಲಿ ಕಾರ್ಯಕರ್ತರ ಬಲದಿಂದ ಗೆಲ್ಲುವ ವಿಶ್ವಾಸ ಇದೆ ಎಂದರು.
ಸಂಸದ ಬ್ರಿಜೇಶ್ ಚೌಟ, ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ್, ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಭಾಗಿರತಿ ಮುರಳಯ್ಯ, ಉಮಾನಾಥ ಕೋಟ್ಯಾನ್, ಮಾಜಿ ಮೇಯರ್ ಸುಧೀರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕರ್ತರು ಇದ್ದರು.
ಇನ್ನು ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ನಾಮಪತ್ರ ಸಲ್ಲಿಕೆ ಮಾಡಿ ಮಾತನಾಡಿ, 20 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಗ್ರಾ.ಪಂ, ತಾ.ಪಂ ಸದಸ್ಯನಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷನಾಗಿ ಅನುಭವ ಹೊಂದಿದ್ದೇನೆ. ಸ್ಥಳೀಯ ಸಂಸ್ಥೆಗಳ ಎಲ್ಲಾ ಸಮಸ್ಯೆಗಳ ಅರಿವು ನನಗಿದೆ. ಆದ ಕಾರಣ ಪರಿಣಾಮಕಾರಿ ಆಗಿ ಕೆಲಸ ಮಾಡಲು ಸಾಧ್ಯವಿದೆ ಎಂದರು.
ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾರಿ, ಮಾಜಿ ಸಚಿವ ರಮಾನಾಥ ರೈ, ಐವನ್ ಡಿಸೋಜ ಸೇರಿದಂತೆ ಹಲವರು ಇದ್ದರು.