ಬೆಂಗಳೂರು: ರಾಜ್ಯದಲ್ಲಿ ಹಿಂಗಾರಿನ ಮಳೆ ಅಬ್ಬರಿಸಲಿದ್ದು, 14 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ದಾವಣಗೆರೆ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಹಲವು ಕಡೆಗಳಲ್ಲಿ ಗುಡುಗು ಸೇರಿದಂತೆ ಮಳೆ ಸುರಿಯಲಿದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಂಭವವಿದೆ. ಉತ್ತರ ಬಂಗಾಳ ಕೊಲ್ಲಿ, ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದ ಪಕ್ಕದ ಕರಾವಳಿ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, 5.8 ಕಿಮೀ ಎತ್ತರದಲ್ಲಿ ಇರುವ ಚಂಡಮಾರುತ ಪಶ್ಚಿಮಕ್ಕೆ ವಾಲುತ್ತಿದೆ. ಲಕ್ಷ ದ್ವೀಪ ಮತ್ತು ನೆರೆಹೊರೆ ಮೇಲಿನ ಚಂಡಮಾರುತದ ಪರಿಚಲನೆ ಈಗ ಆಗ್ನೇಯ ಅರೇಬಿಯನ್ ಸಮುದ್ರದ ಮೇಲಿದ್ದು, ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಮೀ ಎತ್ತರದಲ್ಲಿದೆ ಅದು ದಕ್ಷಿಣ ಕೇರಳ ಕಡೆಗೆ ಮಳೆ ಸಾಗುತ್ತಿದೆ ಎಂದು ತಿಳಿಸಿದೆ.
ನೈಋತ್ಯ ಮುಂಗಾರು ದುರ್ಬಲವಾಗುವತ್ತ ಸಾಗಲಿದ್ದು, ಹಿಂಗಾರಿನ ಪ್ರಭಾವ ರಾಜ್ಯದಲ್ಲಿ ಕಂಡು ಬಂದಿದೆ. ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆ ಆಗುತ್ತಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲ ಸ್ಥಳಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.