ದೌರ್ಜನ್ಯ ಪ್ರಕರಣ ಪರಿಹಾರ ಮೊತ್ತ ತ್ವರಿತ ವಿತರಿಸಿ: ಜಿಲ್ಲಾಧಿಕಾರಿ ದರ್ಶನ್ ಸೂಚನೆ

Spread the love

ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ತ್ವರಿತವಾಗಿ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಹಾಗೂ ಎಸ್.ಸಿ.ಪಿ – ಟಿ.ಎಸ್.ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ದೌರ್ಜನ್ಯ ಪ್ರಕರಣಗಳ ಎಫ್.ಐ.ಆರ್ ದಾಖಲಾದ ನಂತರ ಪರಿಹಾರವನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು. ಸಂತ್ರಸ್ತರು ಅಗತ್ಯ ದಾಖಲೆಗಳನ್ನು ಹೊಂದಿಸಲು ಸಮಾಜ ಕಲ್ಯಾಣ ಇಲಾಖೆಯು ಸಹಕಾರ ನೀಡಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಹೇಮಲತಾ ಅವರು ಮಾತನಾಡಿ, 2025 ರಲ್ಲಿ ಜಿಲ್ಲೆಯಲ್ಲಿ 69 ದೌರ್ಜನ್ಯ ಪ್ರಕರಣಗಳು ದಾಖಲಾಗಿದೆ. 2026 ರಲ್ಲಿ ಮಾರ್ಚ್ 15 ರವರೆಗೆ 11 ದೌರ್ಜನ್ಯ ಪ್ರಕರಣಗಳು ದಾಖಲಾಗಿದೆ. ಈ ಪೈಕಿ 5 ಪ್ರಕರಣಗಳಿಗೆ ಪರಿಹಾರ ವಿತರಣೆ ಬಾಕಿ ಇದೆ ಎಂದರು.

ಇದೇ ಸಂದರ್ಭದಲ್ಲಿ ಸಫಾಯಿ ಕರ್ಮಚಾರಿ ಸ್ಕ್ಯಾವೆಂಜರ್ ಗಳ ಪ್ರಗತಿ ಪರಿಶೀಲನೆ ಸಭೆ, ಹಾಗೂ ಎಸ್.ಸಿ -ಎಸ್.ಟಿ ಅಲೆಮಾರಿ, ಅರೆ ಅಲೆಮಾರಿ, ಸಮುದಾಯಗಳ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯನ್ನು ಜಿಲ್ಲಾಧಿಕಾರಿ ನಡೆಸಿದರು.

ಎಲ್ಲ ಇಲಾಖೆಗಳು ಎಸ್. ಸಿ. ಪಿ / ಟಿ. ಎಸ್. ಪಿ ಕಾರ್ಯಕ್ರಮಗಳ ಗುರಿಯನ್ನು ನಿಗದಿತ ಅವಧಿಯಲ್ಲಿ ತಲುಪಬೇಕು ಮತ್ತು ಫಲಾನುಭವಿಗಳಿಗೆ ಅಗತ್ಯ ನೆರವು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಉಪ ಪೊಲೀಸ್ ಆಯುಕ್ತ ಮಿಥುನ್ ಎಚ್. ಎನ್, ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಇದ್ದರು.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *