ಮಂಗಳೂರು: ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿನ ರಸ್ತೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯ ಎಸೆವ ಮತ್ತು ಸುಡುವ ಪ್ರಕರಣಗಳನ್ನು ಗುರುತಿಸಿ ದಂಡ ವಿಧಿಸಬೇಕು. ದಂಡ ಪಾವತಿಸದೇ ಇದ್ದಲ್ಲಿ ಸ್ಥಳೀಯ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಬೇಕು. ಈ ಬಗ್ಗೆ ಕೂಡಲೇ ಪ್ರತೀ ತಾಲೂಕಿನಿಂದ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಲು ವರದಿ ನೀಡುವಂತೆ ಜಿಲ್ಲಾ ಪಂಚಾಯಿತಿ ಸಿಇಒ ನರ್ವಡೆ ವಿನಾಯಕ ಕಾರ್ಭಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವ ಕುರಿತು ಗುರುವಾರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿಡಿಯೊ ಸಭೆಯಲ್ಲಿ ಅವರು ಮಾತನಾಡಿದರು.
ಪ್ರತೀ ತಿಂಗಳು 1 ನೇ ಮತ್ತು 3 ನೇ ಶನಿವಾರ ಆಯೋಜಿಸುವ ಸ್ವಚ್ಛ ಶನಿವಾರ ಸ್ವಚ್ಛತಾ ಕಾರ್ಯದಲ್ಲಿ ಗ್ರಾಮ ಪಂಚಾಯತ್ಗಳು ತಮ್ಮ ವ್ಯಾಪ್ತಿಯ ಎಲ್ಲ ರಸ್ತೆ ಇಕ್ಕೆಲಗಳನ್ನು ಸ್ವಚ್ಛಗೊಳಿಸಬೇಕು. ಸ್ವಚ್ಛ ಸಂಕೀರ್ಣ ಹೊಂದಿರದ 63 ಗ್ರಾಮ ಪಂಚಾಯತ್ಗಳಲ್ಲಿ ಘಟಕ ನಿರ್ಮಾಣದ ಬಗ್ಗೆ ತಾಲೂಕು ಪಂಚಾಯತ್ ಅತ್ಮ ನಿರ್ಭರ ಭಾರತ್ ನಿಧಿ ಮತ್ತು ಗ್ರಾಮ ಪಂಚಾಯತ್ಗಳಲ್ಲಿ ಲಭ್ಯ ಇರುವ ಅನುದಾನವನ್ನು ಬಳಸಿ ಕನಿಷ್ಟ 1000 ಚದರ ಅಡಿ ವಿಸ್ತೀರ್ಣದ ಘಟಕ ನಿರ್ಮಾಣಕ್ಕೆ ಕ್ರಿಯಾ ಯೋಜನೆ ತಯಾರಿಸುವಂತೆ ಸೂಚಿಸಿದರು.
ನೈರ್ಮಲ್ಯ ತ್ಯಾಜ್ಯ ನಿರ್ವಹಣೆಗಾಗಿ ಮೊದಲ ಹಂತದಲ್ಲಿ 92 ಗ್ರಾಮ ಪಂಚಾಯತ್ಗಳನ್ನು ಗುರುತಿಸಲಾಗಿದ್ದು, ಇವುಗಳಲ್ಲಿ ತ್ಯಾಜ್ಯ ನಿರ್ವಹಣಾ ಸಂಸ್ಥೆಯೊಂದಿಗೆ 48 ಗ್ರಾಮ ಪಂಚಾಯತ್ಗಳು ಕೂಡಲೇ ಒಪ್ಪಂದ ಮಾಡಿಕೊಳ್ಳಬೇಕು. ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಈಗಾಗಲೇ ಹೊರಡಿಸಲಾಗಿರುವ ಸುತ್ತೋಲೆಯಂತೆ ಗ್ರಾಮ ಪಂಚಾಯತ್ಗಳಲ್ಲಿ ಈ ವಸ್ತುಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಮಾರಾಟ, ವಿತರಣೆ ಮಾಡುವುದರ ನಿಯಂತ್ರಣಕ್ಕಾಗಿ ಪರಿಶೀಲನೆ, ದಾಳಿ ನಡೆಸಿ ದಂಡ ವಿಧಿಸಲು ಮತ್ತು ಪರ್ಯಾಯ ವಸ್ತುಗಳ ಬಳಕೆಯನ್ನು ಹೆಚ್ಚಿಸಲು ಕ್ರಮವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮವಹಿಸಬೇಕು. ಈ ಬಗ್ಗೆ ದಂಡ ಸಂಗ್ರಹಣೆಗಾಗಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯತ್ಗಳಿಗೆ ಗುರಿ ನಿಗದಿಪಡಿಸಿ, ಸಂಗ್ರಹಣೆಯಾದ ದಂಡ ವಿಧಿಸಲು ಸೂಚಿಸಿದರು.
ದ.ಕ. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್, ಯೋಜನಾ ಅಧಿಕಾರಿ ಇ. ಜಯರಾಮ್, ಪರಿಸರ ಅಧಿಕಾರಿ ಮಹೇಶ್ವರಿ ಸಿಂಗ್, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರು ಇದ್ದರು.





