ಕಾರವಾರ: ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಆಡ್ವೈಟೈಸಿಂಗ್ ಲಿಮಿಟೆಡ್ ಕಾರವಾರ ಶಾಖಾ ಕಚೇರಿಯನ್ನು ಶನಿವಾರ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಆಡ್ವೈಟೈಸಿಂಗ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ರಾಜ್ಯದಾದ್ಯಂತ ಹಲವು ಜಿಲ್ಲೆಗಳಲ್ಲಿ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಆಡ್ವೈಟೈಸಿಂಗ್ ಲಿಮಿಟೆಡ್ ಶಾಖೆಯನ್ನು ಒಳಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಅಧಿಕೃತವಾಗಿ ಕಚೇರಿ ಮಾಡಬೇಕು ಎಂಬ ಉದ್ದೇಶದಿಂದ ಇಂದು ಕಾರವಾರದಲ್ಲಿ 15 ನೇ ಶಾಖಾ ಕಚೇರಿಯನ್ನು ಆರಂಭಿಸಲಾಗಿದೆ. ಈ ಸಂಸ್ಥೆಯ ಮೂಲಕ ಜಾಹೀರಾತುಗಳನ್ನು ಪ್ರಕಟಿಸಲಾಗುತ್ತದೆ. ಕರಾವಳಿ ಉತ್ಸವ, ಹಂಪಿ ಉತ್ಸವ ಸೇರಿದಂತೆ ರಾಜ್ಯದಲ್ಲಿ ಪ್ರಮುಖ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಸ್ಥೆಯು ಆಯೋಜಿಸಿದ್ದು, ಸಂಸ್ಥೆ ದಿನೇ ದಿನೇ ಅಭಿವೃದ್ಧಿಯ ಹೆಜ್ಜೆ ಇಡುತ್ತಿದ್ದು, ಹೆಮ್ಮರವಾಗಿ ಬೆಳೆಯುತ್ತಿದೆ
ಎಂದರು.
ಕಾರವಾರದಲ್ಲಿ ಸಂಸ್ಥೆಯ ಸ್ವಂತ ಕಟ್ಟಡ ನಿರ್ಮಾಣ ಮಾಡುವ ಉದ್ದೇಶದಿಂದ ಈಗಾಗಲೇ ಕರ್ನಾಟಕ ಹೌಸಿಂಗ್ ಬೋರ್ಡ್ ಗೆ ಜಾಗಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡವನ್ನು ನಿರ್ಮಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಕೆಎಂಸಿಎ ಯ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಶಾಖೆಯ ಮ್ಯಾನೇಜರ್ ರಾಘವೇಂದ್ರ ಶಾಸ್ತ್ರಿ, ಸಿಬ್ಬಂದಿ ಇದ್ದರು.





