ಮಂಗಳೂರು: ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇರುವ ಫಿಶ್ ಕಟ್ಟಿಂಗ್ ಯೂನಿಟ್ ಸಂಸ್ಥೆಗೆ ದಾಳಿ ನಡೆಸಿ, 10 ಬಾಲಕಾರ್ಮಿಕರನ್ನು ಪತ್ತೆ ಮಾಡಿದ್ದಾರೆ.
ಸಾರ್ವಜನಿಕರ ದೂರಿನ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಮಕ್ಕಳು ಬಿಹಾರ ಮತ್ತು ನೇಪಾಳ ಮೂಲದವವರು ಎಂದು ದಾಳಿ ವೇಳೆ ತಿಳಿದು ಬಂದಿದೆ.
ಕಾರ್ಯಾಚರಣೆಯಲ್ಲಿ ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯಾ ಸುಲ್ತಾನ, ಕಾರ್ಮಿಕ ಅಧಿಕಾರಿ ಕುಮಾರ್ ಬಿ. ಆರ್, ಹಿರಿಯ ಕಾರ್ಮಿಕ ನಿರೀಕ್ಷಕ ರಾಜಶೇಖರ ರೆಡ್ಡಿ, ಯೋಜನಾ ನಿರ್ದೇಶಕ ಶ್ರೀನಿವಾಸ ನಾಯಕ್, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಪಣಂಬೂರು ಪೊಲೀಸ್ ಠಾಣೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ರಕ್ಷಿಸಿದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ಕಾವೂರು ಶಾಂತಿನಗರದ ಬಾಲಕಿಯರ ಬಾಲಮಂದಿರದಲ್ಲಿ ಪುನರ್ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಬಾಲಕಾರ್ಮಿಕ ಪದ್ಧತಿ ಸಾಮಾಜಿಕ ಅನಿಷ್ಟ ಪಿಡುಗು ಆಗಿದ್ದು, ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ ಕಾಯ್ದೆ-1986 ರ ಅನ್ವಯ 14 ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. 15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಲ್ಲದೇ 15 ವರ್ಷದಿಂದ 18 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಅಲ್ಲದ ಸಂಸ್ಥೆಯಲ್ಲಿ ದುಡಿಯುತ್ತಿರುವುದನ್ನು ನಿಯಂತ್ರಿಸಲಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಯ್ದೆ ಉಲ್ಲಂಘಿಸಿದ ಮಾಲೀಕರಿಗೆ ರೂ. 50 ಸಾವಿರ ರೂಪಾಯಿವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ತಪ್ಪಿತಸ್ಥ ಮಾಲೀಕರ ಮೇಲೆ ಪೊಲೀಸ್ ಇಲಾಖೆಯಿಂದ ಎಫ್.ಐ.ಆರ್ ಸಹ ದಾಖಲಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕರು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರಿಂದ ದುಡಿಸಿಕೊಳ್ಳುತ್ತಿರುವುದು ಕಂಡು ಬಂದಲ್ಲಿ ಚೈಲ್ಡ್ ಲೈನ್: 1098, ಕಾರ್ಮಿಕ ಇಲಾಖೆಯ ದೂರವಾಣಿ ಸಂಖ್ಯೆಗಳಾದ 0824-2435343, 2433132, 2437479 ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ದೂರವಾಣಿ ಸಂಖ್ಯೆ 2433131 ಗೆ ಕರೆ ಮಾಡಿ ತಿಳಿಸಬಹುದು ಎಂದು ತಿಳಿಸಿದ್ದಾರೆ.