ತಾಯಿ,ಮಗುವಿನ ಸುರಕ್ಷತೆಗೆ ಆದ್ಯತೆ ನೀಡಿ, ಸರಕಾರದ ಎಲ್ಲ ಸವಲತ್ತು ಸಿಗುವಂತೆ ಎಚ್ಚರ ವಹಿಸಿ: ಡಿಸಿ ಲಕ್ಷ್ಮಿಪ್ರಿಯಾ

ತಾಯಿ ಮತ್ತು ಮಗುವಿನ ಸುರಕ್ಷತೆಗೆ ಆದ್ಯತೆ ನೀಡಿ ಜಿಲ್ಲಾಧಿಕಾರಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗರ್ಭಿಣಿಯರನ್ನು ಪ್ರಸವ ಪೂರ್ವ ಆರೈಕೆಗೆ ನಿಗದಿತ ಅವಧಿಯೊಳಗೆ ನೋಂದಣಿ ಮಾಡಿಕೊಂಡು, ಅವರಿಗೆ ಸರ್ಕಾರದಿಂದ ನೀಡುವ ಎಲ್ಲ ಸವಲತ್ತು ಮತ್ತು ಸೇವೆಗಳನ್ನು ಒದಗಿಸುವ ಮೂಲಕ ತಾಯಿ ಮತ್ತು ಶಿಶು ಮರಣ ತಪ್ಪಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಗರ್ಭಿಣಿಯರನ್ನು ನಿಗದಿತ ಅವಧಿಯೊಳಗೆ ನೋಂದಣಿ ಮಾಡಿಕೊಂಡು ತಾಯಿ ಕಾರ್ಡ್ ವಿತರಿಸುವ ಮೂಲಕ ಗರ್ಭಿಣಿ ಮತ್ತು ಶಿಶುವಿನ ಆರೋಗ್ಯವಂತ ಬೆಳವಣಿಗೆ ಮತ್ತು ಸುರಕ್ಷಿತ ಹೆರಿಗೆ ಆಗುವ ರೀತಿಯಲ್ಲಿ ನಿಯಮಿತವಾಗಿ ತಪಾಸಣೆ ಮತ್ತು ಆರೋಗ್ಯ ಸೇವೆಗಳನ್ನು ಒದಗಿಸುವಂತೆ ಸೂಚಿಸಿದ ಅವರು ವಿಳಂಬ ನೋಂದಣಿಗೆ ಆಗದಂತೆ ಎಚ್ಚರ ವಹಿಸಿ ಎಂದರು.

ಜಿಲ್ಲೆಯಲ್ಲಿ 2025-26 ರಲ್ಲಿ 15,607 ಹೆರಿಗೆ ಆಗಿದ್ದು, ಇದರಲ್ಲಿ 90 ಶಿಶು ಮರಣಗಳು ಸಂಭವಿಸಿದ್ದು, ಇವುಗಳಲ್ಲಿ ವಿವಿಧ ವೈದ್ಯಕೀಯ ಕಾರಣಗಳಿಂದ ತಡೆಯಲು ಸಾಧ್ಯವಿಲ್ಲದ 69 ಮರಣಗಳಾಗಿದ್ದು, ಕಳೆದ ಸಾಲಿಗೆ ಹೋಲಿಸಿದ್ದಲ್ಲಿ ಶಿಶು ಮರಣ ಪ್ರಮಾಣದ ಸಂಖ್ಯೆ ಕಡಿಮೆ ಇದ್ದು, ಇದನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸುವಂತೆ ತಿಳಿಸಿದ ಅವರು, ಗರ್ಭಿಣಿ ಮಹಿಳೆಯರಿಗೆ ನವಜಾತ ಶಿಶುವಿನ ಪಾಲನೆ ಮತ್ತು ಹಾಲುಣಿಸುವ ವಿಧಾನಗಳ ಕುರಿತಂತೆ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಎಚ್.ಪಿ.ವಿ ಲಸಿಕೆ ಸೇರಿದಂತೆ ವಿವಿಧ ಲಸಿಕೆಗಳನ್ನು ನೀಡುವ ಕಾರ್ಯಕ್ರಮಗಳಲ್ಲಿ ಶೇ 100 ರಷ್ಟು ಪ್ರಗತಿ ಸಾಧಿಸಬೇಕು. ಸಾಂಕ್ರಾಮಿಕ ರೋಗಗಳು ಮತ್ತು ವಿವಿಧ ರೀತಿಯ ರೋಗಗಳಿಗೆ ನೀಡುವ ಚಿಕಿತ್ಸೆಯ ಕುರಿತಂತೆ ಪರಿಶೀಲನೆ ನಡೆಸಿದರು.

ಜಿ.ಪಂ. ಸಿಇಒ ಡಾ.ದಿಲೀಷ್ ಶಶಿ ಅವರು ಮಾತನಾಡಿ, ಕೆ.ಎಫ್.ಡಿ ಸಂಶಯಾಸ್ಪದ ಪ್ರಕರಣಗಳಲ್ಲಿ 24 ಗಂಟೆಯೊಳಗೆ ಸ್ಯಾಂಪಲ್ ಕಲೆಕ್ಷನ್ ಮಾಡುವಂತೆ ಮತ್ತು ನಾಯಿ ಕಡಿತ ಮತ್ತು ಹಾವು ಕಡಿತಕ್ಕೆ ಸಂಬAಧಿಸಿದ ಔಷಧಗಳ ದಾಸ್ತಾನು ಸಾಕಷ್ಟು ಸಂಖ್ಯೆಯಲ್ಲಿ ಇರುವಂತೆ ಎಚ್ಚರಿಕೆ ವಹಿಸಬೇಕು. ವೈದ್ಯಕೀಯ ಶಿಬಿರಗಳನ್ನು ಅಯೋಜಿಸುವ ಮೂಲಕ ರೋಗಿಗಳನ್ನು ಗುರುತಿಸಿ, ಅವರಿಗೆ ಸಕಾಲದಲ್ಲಿ ಚಿಕಿತ್ಸೆಯನ್ನು ಒದಗಿಸಬೆಕು. ಆರೋಗ್ಯ ಕೇಂದ್ರಗಳಲ್ಲಿನ ಮೂಲ ಸೌಕರ್ಯಗಳಲ್ಲಿ ಕೊರತೆಯಿದ್ದರೆ ತಕ್ಷಣ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳುವಂತೆ ಮತ್ತು ಮಳೆಗಾಲದ ಆರಂಭಕ್ಕೆ ಮುನ್ನ ಕಟ್ಟಡಗಳ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ್ ರಾವ್, ಆರ್.ಸಿ. ಎಚ್. ಅಧಿಕಾರಿ ಡಾ.ನಟರಾಜ್ ಹಾಗೂ ಆರೋಗ್ಯ ಇಲಾಖೆಯ ಕಾರ್ಯಕ್ರಮಾಧಿಕಾರಿಗಳು ಮತ್ತು ಎಲ್ಲ ತಾಲೂಕುಗಳ ವೈದ್ಯಾಧಿಕಾರಿಗಳು ಇದ್ದರು.

📢 To advertise on this website please call +91 99808 75054    |    ಸುದ್ದಿ ಹಾಗೂ ಜಾಹೀರಾತು ನೀಡಲು ಸಂಪರ್ಕಿಸಿ +91 99808 75054

Leave a Reply

Your email address will not be published. Required fields are marked *

© 2022–2026 Karavali Daily News. All Rights Reserved | Powered by webbrahma