
ಪುತ್ತೂರು: ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ನಾನು ಗೌರವದಿಂದ ಸ್ವೀಕಾರ ಮಾಡುತ್ತೇನೆ. ಅವರೇ ಹೈಕಮಾಂಡ್ ಎಂಬಂತೆ ಹೇಳಿಕೆ ನೀಡುವಾಗ ಅವರನ್ನೇ ಹೈಕಮಾಂಡ್ ಎಂದು ಸ್ವೀಕಾರ ಮಾಡೋಣ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಪುತ್ತೂರು ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಪತ್ರಕರ್ತರ ಜತೆಗೆ ಮಾತನಾಡಿದರು.
ಐದು ವರ್ಷಗಳಿಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಹೈಕಮಾಂಡ್ ಹಸಿರು ನಿಶಾನೆ ತೋರಿದ್ದು, ಯಾವುದೇ ಊಹಾಪೋಹ ಇಲ್ಲ’ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ ನೀಡಿದ ಕುರಿತು ಉಪ ಮುಖ್ಯಮಂತ್ರಿ ಡಿಕೆಶಿ ಅವರು ವ್ಯಂಗ್ಯವಾಗಿಯೇ ಪ್ರತಿಕ್ರಿಯೆ ನೀಡಿದರು.
ಶಾಸಕ ಬಸವರಾಜು ಅಧಿಕಾರ ಒಪ್ಪಂದದ ಬಗ್ಗೆ ಸ್ಪಷ್ಟನೆ ಬೇಕು ಎಂಬ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಸವರಾಜು, ಯತೀಂದ್ರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಏನೇ ಪ್ರತಿಕ್ರಿಯೆ ನೀಡುವುದಿದ್ದರೂ ನವದೆಹಲಿ ಇರುವ ನಾಯಕರು ಪ್ರತಿಕ್ರಿಯೆ ನೀಡಬೇಕು ಎಂದು ತಿಳಿಸಿದರು.

ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಿಲಾನ್ಯಾಸ ನೆರವೇರಿಸಲು ನಿರ್ದೇಶನ ನೀಡಿದ್ದೇನೆ. ಎಐಸಿಸಿ ನಾಯಕರು ದಿನಾಂಕ ನಿಗದಿ ಮಾಡಲಿ, ಬಿಡಲಿ ನಾನಂತೂ ಎಲ್ಲ ಸಿದ್ಧತೆ ಮಾಡಿಕೊಂಡು ಪ್ರಾರಂಭ ಮಾಡುತ್ತೇನೆ ಎಂದು ತಿಳಿಸಿದರು.
“ಶುಕ್ರವಾರ ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದೇನೆ. ಮಾರ್ಚ್ 10 ಕ್ಕೆ ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸುತ್ತಿದ್ದೇನೆ ಎಂದು ತಿಳಿಸಿದರು.
ಶಿಲಾನ್ಯಾಸ ಕಾರ್ಯಕ್ರಮಕ್ಕೆ ಮುಸ್ಲಿಂ ಮುಖಂಡರಿಗೆ ಆಹ್ವಾನ ನೀಡಿಲ್ಲ ಎಂಬ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಜಾತಿ ಮೇಲೆ ನಿಂತಿಲ್ಲ, ನೀತಿ ರಾಜಕಾರಣದ ತಳಹದಿಯ ಮೇಲೆ ರಾಜಕಾರಣ ಮಾಡುತ್ತದೆ. ನಮಗೆ ಎಲ್ಲ ಜಾತಿ, ಧರ್ಮದವರು ಬೇಕು. ನಾವು ಜಾತಿ ಹಾಗೂ ಧರ್ಮದ ಮೇಲೆ ರಾಜಕಾರಣ ಮಾಡಲ್ಲ. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಇದು ನಮ್ಮ ಪಕ್ಷದ ಸಿದ್ಧಾಂತ. ಯಾರೋ ಅಸೂಯೆ ಇರುವವರು ಈ ರೀತಿ ಮಾಡುತ್ತಾರೆ ಎಂದು ತಿಳಿಸಿದರು.


