ಕಾರವಾರ: ಏಪ್ರಿಲ್ 30 ರಿಂದ ಮೇ 13 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದ್ದು, ಈ ಪರೀಕ್ಷೆಗಳಿಗೆ ಜಿಲ್ಲೆಯಲ್ಲಿ ಒಟ್ಟು 2820 ಪರೀಕ್ಷಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ಜರುಗಲಿದ್ದು, ಯಾವುದೇ ಗೊಂದಲಕ್ಕೆ ಆಸ್ಪದ ನೀಡದೇ ಪರೀಕ್ಷಾ ಕಾರ್ಯವನ್ನು ನಡೆಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲಾಗಿದ್ದು, ಅದೇ ರೀತಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2 ಯಲ್ಲಿ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಪರೀಕ್ಷಾ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಮಂಡಳಿಯು ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ ಕ್ಯಾಮರವನ್ನು ಪರಿಶೀಲಿಸಿಕೊಂಡು ಸುಸ್ಥಿತಿಯಲ್ಲಿಡಲು ಪರೀಕ್ಷಾ ಕೇಂದ್ರ ಮುಖ್ಯಸ್ಥರಿಗೆ ಸೂಚನೆ ನೀಡಿದ ಅವರು, ಸಿಸಿಟಿವಿ ಅಡಿಯಲ್ಲಿ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಬಂಡಲ್ ತೆರೆಯುವುದು ಮತ್ತು ಉತ್ತರ ಪತ್ರಿಕೆಗಳನ್ನು ಸ್ವೀಕರಿಸಿ ಬಂಡಲ್ ಮಾಡುವ ಕಾರ್ಯಗಳನ್ನು ನಿರ್ವಹಿಸಬೇಕು. ಜಿಲ್ಲಾ ಪಂಚಾಯತ್ ನಲ್ಲಿ ಸಿಸಿಟಿವಿ
ವೀಕ್ಷಣೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆಗೆ ಅಗತ್ಯವಿರುವ ಸಿದ್ದತೆಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಪರೀಕ್ಷಾ ಕೇಂದ್ರದಲ್ಲಿ ಕುಡಿವ ನೀರು, ಶೌಚಾಲಯ ಹಾಗೂ ಇನ್ನಿತರ ಸೌಕರ್ಯಗಳನ್ನು ಸುಸ್ಥಿತಿಯಲ್ಲಿಡಲು ಪರೀಕ್ಷಾ ಕೇಂದ್ರ ಮುಖ್ಯಸ್ಥರಿಗೆ ಸೂಚಿಸಿ, ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮತ್ತು ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ಸಾಗಾಟ ವಾಹನಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದರು.
ಎಲ್ಲಾ ಪರೀಕ್ಷೆ ಕೇಂದ್ರಗಳಿಗೆ ಆರೋಗ್ಯ ಸಹಾಯಕರುಗಳನ್ನು ನಿಯೋಜಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ನಡೆಯುವ ದಿನ ವಿದ್ಯುತ್ ವ್ಯತ್ಯಯ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಹೆಸ್ಕಾಂ ಅಧಿಕಾರಿಗಳಿಗೆ ಮತ್ತು ಪರೀಕ್ಷಾ ದಿನ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಬಸ್ ವ್ಯವಸ್ಥೆಯನ್ನು ಒದಗಿಸುವಂತೆ ಸೂಚಿಸಿದರು.
ಸಭೆಯಲ್ಲಿ ಎಡಿಸಿ ಸಾಜಿದ್ ಮುಲ್ಲಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಸ್ ನಾಯ್ಕ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಹಾಗೂ ವಿಡಿಯೊ ಕಾನ್ಫರೆನ್ಸ್ ಮೂಲಕ ಎಲ್ಲ ತಾಲೂಕುಗಳ ತಹಶೀಲ್ದಾರ್ ಇದ್ದರು.





