ಕಾರವಾರ: ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಟಿ. ಶ್ಯಾಮ ಭಟ್ ಮತ್ತು ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಮಂಗಳವಾರ ಕಾರವಾರದ ಹಿಂದುಳಿದ ವರ್ಗಗಳ ಇಲಾಖೆಯ ಮತ್ತು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ನಂತರ ಕ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಅವರು, ಕೈದಿಗಳ ಕುಂದು ಕೊರತೆಗಳನ್ನು ಆಲಿಸಿದರು. ಜಿಲ್ಲಾ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ನಿಲ್ದಾಣದಲ್ಲಿ ಸ್ವಚ್ಛತೆ ಮತ್ತು ಶೌಚಾಲಯಗಳ ಸ್ಥಿತಿಗತಿ ಬಗ್ಗೆ ಪರಿಶೀಲಿಸಿ, ನಿಲ್ದಾಣದ ಆವರಣದಲ್ಲಿನ ಮಳಿಗೆಗಳಲ್ಲಿ ಮಾರಾಟ ಮಾಡುವ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸಿದರು. ನಂತರ ಗ್ರಾಮೀಣ ಪೊಲೀಸ್ ಠಾಣೆ ಮತ್ತು ಶಹರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಾಭಕ್ಷ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವೀರನಗೌಡ ಪಿ. ಏನಗಗೌಡರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಉಮೇಶ, ಜಿಲ್ಲಾ ಪರಿಸರ ಅಧಿಕಾರಿ ಸಂತೋಷ ಇದ್ದರು.





